ಚನ್ನರಾಯಪಟ್ಟಣ: ‘ಮುಂಬರುವ ದಿನಗಳಲ್ಲಿ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ದೊರಕುತ್ತದೆ’ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದಲ್ಲಿ ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಕೇಂದ್ರ ಸರ್ಕಾರ ಮೀಸಲಾತಿ ಅನುಷ್ಠಾನಕ್ಕೆ ಮುಂದಾಗಿದೆ. ಕರ್ನಾಟಕ ರಾಜ್ಯ ವಿಧಾನಸಭೆ 224 ಕ್ಷೇತ್ರಗಳ ಪೈಕಿ 74 ಕೇತ್ರಗಳಲ್ಲಿ ಮಹಿಳೆಯರು ಆಯ್ಕೆಯಾಗಲಿದ್ದಾರೆ. ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ’ ಎಂದರು.
‘ರಾಜ್ಯ ಸರ್ಕಾರದ ಬಜೆಟ್ನಲ್ಲಿ ಅಂಗನವಾಡಿ ಸಹಾಯಕಿಯರಿಗೆ 1000 ಮತ್ತು ಕಾರ್ಯಕರ್ತೆಯರಿಗೆ 750 ಗೌರವ ಧನ ಹೆಚ್ಚಿಸಲಾಗಿದೆ. ಇದು ಸಾಕಾಗುವುದಿಲ್ಲ. ಬಜೆಟ್ ಮೇಲಿನ ಚರ್ಚೆಯಲ್ಲಿ ಪುನಃ ಚರ್ಚಿಸಲಾಗುವುದು. ಈ ಸಂದರ್ಭದಲ್ಲಿ ಗೌರವಧನ ಪರಿಶೀಲಿಸಲು ಮುಖ್ಯಮಂತ್ರಿಗೆ ಅವಕಾಶ ಇದೆ’ ಎಂದು ತಿಳಿಸಿದರು.
‘ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಮೂಲಕ ಮಹಿಳೆಯರ ರಕ್ಷಣೆಗೆ ರಾಜ್ಯ ಸರ್ಕಾರ ಗಮನಹರಿಸಬೇಕು’ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ದೀಪಾ, ಪೇಟೆ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ನೇತ್ರಾವತಿ ಮಾತನಾಡಿದರು. ನಿವೃತ್ತ ಹಾಗು ಹಾಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿ ಎ.ಎಸ್. ಇಂದ್ರಾ, ಅಂಗನವಾಡಿ ಸಹಾಯಕಿಯರ ಸಂಘದ ಅಧ್ಯಕ್ಷೆ ನಾಗರತ್ನಾ, ಗೌರವಾಧ್ಯಕ್ಷೆ ಜಯಲಕ್ಷ್ಮಮ್ಮ, ಕಾರ್ಯದರ್ಶಿ ನಾಗರತ್ನಮ್ಮ, ಸ್ತ್ರಿಶಕ್ತಿ ಸಂಘದ ಅಧ್ಯಕ್ಷೆ ಮೀನಾಕ್ಷಮ್ಮ, ಕಾರ್ಯದರ್ಶಿ ಶಾಂತಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.