ಹಾಸನ: ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಏಳು ಜಿಲ್ಲೆಗಳಿಗೆ ನೀರು ಪೂರೈಸುವ ಎತ್ತಿನ ಹೊಳೆ ಯೋಜನೆ ಮೊದಲ ಹಂತ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ನಲ್ಲಿ ನೀರು ಮೇಲೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಸಕಲೇಶಪುರ ತಾಲ್ಲೂಕಿನ ಕೆಸಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ಎತ್ತಿನಹೊಳೆ ಯೋಜನೆ ಕಾಮಗಾರಿ
ಪರಿಶೀಲಿಸಿದ ನಂತರ ಮಾತನಾಡಿದ ಅವರು, ಈ ಯೋಜನೆಯಲ್ಲಿ 24.01 ಟಿಎಂಸಿ ನೀರು ಲಭ್ಯವಾಗಲಿದೆ. ನಿರೀಕ್ಷಿತ ಪ್ರಮಾಣದ ಕಾಮಗಾರಿ ನಡೆಯದ ಕಾರಣ ಇಂದು ಯೋಜನಾ ವೆಚ್ಚ ₹ 23 ಸಾವಿರ ಕೋಟಿ ತಲುಪಿದೆ. 39 ಎಕರೆ ಭೂಮಿ ಸ್ವಾಧೀನ ಬಾಕಿ ಇದ್ದು, ಭೂ ಮಾಲೀಕರು ನ್ಯಾಯಾಲಯದಲ್ಲಿ ದಾವೆ ಹೂಡಿರುವುದರಿಂದ ವಿಳಂಬವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗಿದೆ. ಪರಿಹಾರ ಪಡೆಯದವರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟು, ಭೂಮಿ ಸ್ವಾಧೀನಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಬಳಿ ₹ 200 ಕೋಟಿ ಇದೆ ಎಂದು ತಿಳಿಸಿದರು.
ಕೆಪಿಟಿಸಿಎಲ್ನಿಂದ ವಿದ್ಯುತ್ ಸಂಪರ್ಕ ಮಂಜೂರಾತಿ ದೊರೆತಿದ್ದು, 15 ದಿನದೊಳಗೆ ವಿದ್ಯುತ್
ಸಂಪರ್ಕದ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.