ADVERTISEMENT

ಸಂತ್ರಸ್ತ ಕುಟುಂಬಕ್ಕೆ ತಕ್ಷಣ ಸೌಲಭ್ಯ ಕಲ್ಪಿಸಿ

ರೈತರ ಆತ್ಮಹತ್ಯೆ ಪ್ರಕರಣ ತಡೆಯಲು ಅಧಿಕಾರಿಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಮೇ 2019, 14:36 IST
Last Updated 9 ಮೇ 2019, 14:36 IST
ಹಾಸನದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್‌.ವೈಶಾಲಿ ಅವರು ಅಧಿಕಾರಿಗಳ ಸಭೆ ನಡೆಸಿದರು.
ಹಾಸನದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್‌.ವೈಶಾಲಿ ಅವರು ಅಧಿಕಾರಿಗಳ ಸಭೆ ನಡೆಸಿದರು.   

ಹಾಸನ: ಜಿಲ್ಲೆಯಲ್ಲಿ ನಡೆದಿರುವ ಆತ್ಮಹತ್ಯೆ ಪ್ರಕರಣಗಳ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ಸೌಲಭ್ಯಗಳು ತಕ್ಷಣ ಒದಗಿಸಲು ಕ್ರಮವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ವಿಶೇಷ ಸೌಲಭ್ಯ ದೊರಕಿಸಿಕೊಡುವ ಸಲುವಾಗಿ ನಡೆದ ಉಸ್ತುವಾರಿ ಸಮಿತಿ ಸಭೆ ಉದ್ದೇಶಿಸಿ ಮಾತನಾಡಿದರು.

ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಕಾರಣಗಳನ್ನು ತಿಳಿದು ಅವರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ADVERTISEMENT

ಸರ್ಕಾರದಿಂದ ನೀಡುತ್ತಿರುವ ವಿವಿಧ ಆರೋಗ್ಯ ವಿಮಾ ಯೋಜನೆಗಳು ಮತ್ತು ಇತರೆ ವೈದ್ಯಕೀಯ ಸೌಲಭ್ಯಗಳ ಬಗ್ಗೆ ರೈತ ಕುಟುಂಬಗಳಿಗೆ ತಿಳಿಸಿ ಕೊಡಬೇಕು. ಅವುಗಳ ಬಳಸಿಕೊಳ್ಳುತ್ತಿದ್ದಾರೆಯೇ ಎಂದು ಸಮೀಕ್ಷೆ ನಡೆಸಬೇಕು. ರೈತ ಆತ್ಮಹತ್ಯೆ ಹೊಂದಿದ ವಿಷಯ ತಿಳಿದ ತಕ್ಷಣ ಅದಕ್ಕೆ ಕಾರಣಗಳ ಬಗ್ಗೆ ಮಾಹಿತಿ ಕಲೆ ಹಾಕಿ ಉಪವಿಭಾಗಾಧಿಕಾರಿ ಹಂತದ ಸಮಿತಿ ಮಾಡಿಸಬೇಕು ಎಂದು ಸೂಚಿಸಿದರು.

ರೈತ ಮರಣ ಹೊಂದಿದ 15 ದಿನದೊಳಗೆ ಸಂಬಂಧಪಟ್ಟ ಕುಟುಂಬಕ್ಕೆ ತಲುಪಬೇಕಾದ ಪರಿಹಾರ ಒದಗಿಸಬೇಕು. ಆ ಕುಟುಂಬದ ಸದಸ್ಯರಿಗೆ ನೀಡುವ ಮಾಸಿಕ ಪಿಂಚಣಿಗಳು ಸೂಕ್ತ ಫಲಾನುಭವಿಗೆ ತಲುಪಬೇಕು. ಮಕ್ಕಳಿಗೆ ಶಾಲಾ ಶುಲ್ಕದಲ್ಲಿ ವಿಶೇಷ ಮಾನ್ಯತೆ ಒದಗಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.

ರೈತರ ಆತ್ಮಹತ್ಯೆ ಪ್ರಕರಣಗಳು ನಿಲ್ಲಬೇಕು. ಮೃತ ಕುಟುಂಬಗಳಿಗೆ ನೀಡುತ್ತಿರುವ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪಿದೆಯಾ ಎಂಬುದರ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳು ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಸಂತ್ರಸ್ತ ಕುಟುಂಬದ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯಗಳು ತಲುಪುತ್ತಿದೆಯೇ ಎಂಬುದನ್ನು ಪರಿಶೀಲಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಗ್ಗೆ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಹಾಸನ ಉಪ ವಿಭಾಗಾಧಿಕಾರಿ ಎಚ್.ಎಲ್ ನಾಗರಾಜ್ , ಸಕಲೇಶಪುರ ಉಪ ವಿಭಾಗಾಧಿಕಾರಿ ಕವಿತಾ ರಾಜಾರಾಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್, ಕೃಷಿ ಇಲಾಖೆಯ ಉಪ ನಿರ್ದೇಶಕಿ ಕೋಕಿಲ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.