ADVERTISEMENT

ನ್ಯಾಯಾಂಗದ ಮೇಲಿನ ನಂಬಿಕೆ ಉಳಿಸಿ

ಹೈಕೋರ್ಟ್ ನ್ಯಾಯಮೂರ್ತಿ ಕೆ. ಸೋಮಶೇಖರ್ ಕರೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 12:23 IST
Last Updated 12 ಡಿಸೆಂಬರ್ 2020, 12:23 IST
ಹಾಸನ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಹೈ ಕೋರ್ಟ್‌ ನ್ಯಾಯಮೂರ್ತಿ ಕೆ.ಸೋಮಶೇಖರ್‌ ಉದ್ಘಾಟಿಸಿದರು.
ಹಾಸನ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಹೈ ಕೋರ್ಟ್‌ ನ್ಯಾಯಮೂರ್ತಿ ಕೆ.ಸೋಮಶೇಖರ್‌ ಉದ್ಘಾಟಿಸಿದರು.   

ಹಾಸನ: ನ್ಯಾಯಾಂಗ ವ್ಯವಸ್ಥೆ ಮೇಲೆ ಜನರು ನಂಬಿಕೆ ಹೊಂದಿದ್ದು, ಅದನ್ನು ಉಳಿಸಿಕೊಳ್ಳಲು ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೆ. ಸೋಮಶೇಖರ್ ಹೇಳಿದರು.

ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ವಕೀಲರ ದಿನಾಚರಣೆ ಉದ್ಘಾಟಿಸಿ ‌ಮಾತನಾಡಿದ
ಅವರು, ಸಂವಿಧಾನದ ಆಶಯಗಳ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಯ ಜವಾಬ್ದಾರಿ ಹೆಚ್ಚಾಗಿದೆ ಎಂದರು.

ವಕೀಲರು ಸಂವಿಧಾನದ ಎಲ್ಲಾ ಅಂಶಗಳನ್ನು ಅಧ್ಯಯನ ಮಾಡಿ ಜನಸಾಮಾನ್ಯರ ಹಕ್ಕುಗಳ ರಕ್ಷಣೆ ಜೊತೆಗೆ ಕರ್ತವ್ಯಗಳ ಬಗ್ಗೆಯೂ ಅರಿವು ಮೂಡಿಸಬೇಕು. ಪರಿಶ್ರಮ, ಶ್ರದ್ಧೆ, ಬದ್ದತೆ ಹಾಗೂ ಸಾಮಾಜಿಕ
ಹೊಣೆಗಾರಿಕೆಯೊಂದಿಗೆ ಹೆಚ್ಚಿನ ಜ್ಞಾನ ಸಂಪಾದಿಸಿ ಜನರಿಗೆ ನ್ಯಾಯ ಒದಗಿಸಬೇಕು ಎಂದು ವಕೀಲರಿಗೆ ಸಲಹೆ ನೀಡಿದರು.

ADVERTISEMENT

ಹೈಕೋರ್ಟ್‌‌ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಮಾತನಾಡಿ, ದೇಶದ ಮೊದಲ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ಅವರ ಜನ್ಮ ದಿನದ ನೆನಪಿಗಾಗಿ ವಕೀಲರ ದಿನ ಆಚರಿಸಲಾಗುತ್ತಿದೆ. ಸ್ವಾತಂತ್ರ‍್ಯ ಪೂರ್ವದಲ್ಲಿ ದೇಶದಲ್ಲಿ ಸಾಕಷ್ಟು ರಾಷ್ಟ್ರ ಮಟ್ಟದ ನಾಯಕರಿದ್ದರು. ಆದರೆ ನಂತರದಲ್ಲಿ ರಾಷ್ಟ್ರ ನಾಯಕರು, ರಾಜನೀತಿ ತಜ್ಞರು ಕೊರತೆ ಕಾಡುತ್ತಿದೆ. ಇದಕ್ಕೆ ಕಾರಣ ಏನು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ನುಡಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಸದೃಢಡ ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವವಾದದ್ದು. ಸ್ವಾತಂತ್ರ‍್ಯ ಸಂಗ್ರಾಮದಲ್ಲಿಯೂ ಪಾಲ್ಗೊಂಡಿದ್ದ ಬಹುತೇಕ ನಾಯಕರು ವಕೀಲರಾಗಿದ್ದರು ಎಂದರು.

ಹೈಕೋರ್ಟ್ ನ್ಯಾಯಮೂರ್ತಿಗಳು, ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾಧನೆ ಮಾಡಿದವರು, ಕೊರೊನಾ
ವಾರಿಯರ್ಸ್‌ಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಶಿವಣ್ಣ, ನ್ಯಾಯಾಧೀಶ ರವೀಂದ್ರ ಹೆಗಡೆ, ಪೋಲಿಸ್ ವರಿಷ್ಠಾಧಿಕಾರಿ ಆರ್‌. ಶ್ರೀನಿವಾಸ ಗೌಡ, ವಕೀಲರ ಸಂಘದ ಅಧ್ಯಕ್ಷ ಜೆ.ಪಿ. ಶೇಖರ್, ಉಪಾಧ್ಯಕ್ಷ ಸುರೇಶ್‌ ಕಟ್ಟಾಯ, ಖಜಾಂಚಿ ಡಿ.ಆರ್‌. ಲೋಹಿತಾಶ್ವ, ಪ್ರಧಾನ ಕಾರ್ಯದರ್ಶಿ ಕಾರ್ಲೆ ಮೊಗಣ್ಣಗೌಡ, ಜಂಟಿ ಕಾರ್ಯದರ್ಶಿ ಗೀತಾ, ಉಡುಪಿಯ ಹಾಸ್ಯ ಭಾಷಣಗಾರ್ತಿ ಸಂಧ್ಯಾಶಣೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.