
ಬೇಲೂರು: ‘ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸಂಶೋಧನಾ ಮನೋಭಾವ ಮತ್ತು ನೈಪುಣ್ಯತೆ ವೃದ್ಧಿಸಲು ಸಹಕಾರಿಯಾಗುತ್ತದೆ’ ಎಂದು ಪೂರ್ಣ ಪ್ರಜ್ಞಾ ಶಾಲೆಯ ಪ್ರಾಂಶುಪಾಲ ಪ್ರಶಾಂತ್ ಹೇಳಿದರು.
ಇಲ್ಲಿನ ಪೂರ್ಣ ಪ್ರಜ್ಞಾ ಶಾಲೆಯಲ್ಲಿ ಈಚೆಗೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ, ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಹಲವಾರು ಮಾದರಿಗಳನ್ನು ಇಡಲಾಗಿದೆ. ಪ್ರತಿ ಎರಡು ವರ್ಷಕ್ಕೊಮ್ಮೆ ಈ ಪ್ರದರ್ಶನ ಏರ್ಪಡಿಸುತ್ತಿದ್ದೇವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಕಾರ್ಯದರ್ಶಿ ಬಿ.ಬಿ.ಶಿವರಾಜ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಜ್ಞಾನಿಕವಾಗಿಯೂ ಹೆಚ್ಚಿನ ಜ್ಞಾನ ಹೊಂದಬೇಕು. ವಿಶ್ವದಲ್ಲೇ ಭಾರತೀಯ ವಿಜ್ಞಾನಗಳಿಗೆ ಬೇಡಿಕೆ ಇದ್ದು, ಈಗಿನ ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಕ್ರೀಡೆ, ವಿಜ್ಞಾನದಲ್ಲಿ ಹೆಚ್ಚಿನ ಸಾಧನೆ ಮಾಡಿ ದೇಶಕ್ಕೆ ಗೌರವ ತರಲು ಮುಂದಾಗಬೇಕು ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವ ಜನಾಂಗ ಮೊಬೈಲ್ ಹಾವಳಿಯಿಂದ ತನ್ನ ಹಳೆಯ ಜೀವನಶೈಲಿ, ಸಂಸ್ಕೃತಿ, ಸಂಸ್ಕಾರ ಮರೆಯುತ್ತಿರುವ ಕಾಲಘಟ್ಟದಲ್ಲಿ ಪೂರ್ಣ ಪ್ರಜ್ಞಾ ವಿದ್ಯಾಸಂಸ್ಥೆಯು ವಿಶೇಷವಾಗಿ ವಸ್ತು ಪ್ರದರ್ಶನ ಏರ್ಪಡಿಸಿರುವುದು ಶ್ಲಾಘನೀಯ ಎಂದರು.
ಪ್ರದರ್ಶನವನ್ನು ಸ್ಥಳೀಯರು, ಪೋಷಕರು ಹಾಗೂ ಶಿಕ್ಷಕ ವರ್ಗ ವೀಕ್ಷಿಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡಿದರು.
ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಅನಂತಸ್ವಾಮಿ, ಮುಖ್ಯಶಿಕ್ಷಕಿ ಶ್ರೀನಿಧಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.