ಹಾಸನ: ರಾಜ್ಯದಲ್ಲಿ ಜಾರಿಗೊಳಿಸಿರುವರಾಷ್ಟ್ರೀಯ ಶಿಕ್ಷಣ ನೀತಿ–2020 (ಎನ್ಇಪಿ) ತಕ್ಷಣ ಸ್ಗಗಿತಗೊಳಿಸುವಂತೆಆಗ್ರಹಿಸಿ ಸಿಪಿಎಂ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕನ್ನಡ ಭಾಷೆ ಮತ್ತು ಅಭಿವೃದ್ಧಿಗೆ ಮಾರಕವಾಗಿದೆ. ಮಹಿಳೆಯರು, ಪರಿಶಿಷ್ಟರು ಹಾಗೂ ಹಿಂದುಳಿದವರ್ಗದವರಿಗೆ ಶಿಕ್ಷಣ ಮರೀಚಿಕೆಯಾಗಿಸುವ ಎನ್ಇಪಿಯನ್ನು ಕೂಡಲೇನಿಲ್ಲಿಸಬೇಕು. ಸಾಧಕ–ಬಾಧಕಗಳ ಬಗ್ಗೆ ಚರ್ಚಿಸಿದ ನಂತರ ಜಾರಿಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಈ ನೀತಿಯು ಕನ್ನಡ, ತೆಲುಗು, ಉರ್ದು, ಮರಾಠಿ, ಕೊಂಕಣಿ ಸೇರಿದಂತೆ ಇತರೆ ಭಾಷೆಗಳ ಮೇಲೆ ಇಂಗ್ಲಿಷ್, ಸಂಸ್ಕೃತ, ಹಿಂದಿ ಭಾಷೆ ಹೇರುವ ಹುನ್ನಾರ ಹೊಂದಿದೆ. ಇದರಿಂದ ಭಾಷೆಗಳು ಮತ್ತಷ್ಟು ಅಪಾಯ ಎದುರಿಸಲಿವೆ. ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣವನ್ನು ಕಾರ್ಪೋರೇಟ್ಕಂಪನಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಲೂಟಿಗೆ ರಾಜ್ಯವನ್ನು ತೆರೆಯುವ ಸಂಚಿನ ಭಾಗ ಇದು.ಇದರಿಂದ ಲಕ್ಷಾಂತರ ಅಂಗನವಾಡಿ ಕೇಂದ್ರಗಳು ಹಾಗೂ ವಿದ್ಯಾರ್ಥಿಗಳ ಕೊರತೆ ಎದುರಿಸುವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಮುಚ್ಚಿ ಹೋಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಬಾಣಂತಿಯರು, ಗರ್ಭಿಣಿಯರು ಹಾಗೂ ಅಪೌಷ್ಟಿಕ ಮಕ್ಕಳಿಗೆ ನೀಡುತ್ತಿರುವ ಪೌಷ್ಟಿಕ ಆಹಾರದ ಯೋಜನೆ
ಕಣ್ಮರೆ ಆಗಲಿದೆ. ಅಲ್ಲದೇ ವ್ಯಾಪಕ ನಿರುದ್ಯೋಗ ಮತ್ತು ಸಾರ್ವಜನಿಕ ಕ್ಷೇತ್ರದ ಉದ್ಯೋಗ ಕಡಿತಕ್ಕೂ
ಕಾರಣವಾಗಲಿದೆ. ಮತ್ತಷ್ಟು ಚರ್ಚೆಗೆ ಒಳಪಡಿಸದೇ ಜಾರಿಗೊಳಿಸಬಾರದು ಎಂದು ಹೇಳಿದರು.
ರಾಜಕೀಯ ಪಕ್ಷಗಳು, ಶಿಕ್ಷಣ ತಜ್ಞರು, ಭಾಷಾ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿಶ್ವವಿದ್ಯಾಲಯಗಳ ಜೊತೆ ಚರ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲಿವರೆಗೂ ಯಾವುದೇಕಾರಣಕ್ಕೆ ಜಾರಿಗೊಳಿಸಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಸ್ಥಳೀಯ ಸಮಿತಿ ಕಾರ್ಯದರ್ಶಿ ಎಚ್.ಆರ್.ನವೀನ್ ಕುಮಾರ್, ಮುಖಂಡರಾದ ಜಿ.ಪಿ.ಸತ್ಯನಾರಾಯಣ, ಅರವಿಂದ್, ವಸಂತ್ಕುಮಾರ್, ಜಯಂತಿ, ರಮೇಶ್, ಶಶಿಕುಮಾರ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.