ಹಾಸನ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ತಮ್ಮ ಪುತ್ರ ಡಾ.ಸೂರಜ್ ರೇವಣ್ಣಸ್ಪರ್ಧಿಸುವುದಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
ಹಾಸನದಲ್ಲಿಯೇ ಸಾಕಷ್ಟು ಅಭ್ಯರ್ಥಿಗಳು ಇದ್ದಾರೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜತೆ ಚರ್ಚಿಸಿ ಹಿರಿಯರು ನಿರ್ಧಾರ ಕೈಗೊಳ್ಳುತ್ತಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ತಮ್ಮ ಪತ್ನಿ ಭವಾನಿ ಬೇಲೂರು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂದು ವದಂತಿ ಹಬ್ಬಿಸಲಾಗಿತ್ತು. ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಮೊದಲು ನನ್ನ ಹೆಸರು ತೇಲಿ ಬಿಡಲಾಗಿತ್ತು. ಈಗ ಪುತ್ರನ ಹೆಸರು ಹೇಳುತ್ತಿದ್ದಾರೆ ಎಂದು ಸೋಮವಾರಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂಸದ ಪ್ರಜ್ವಲ್ ರೇವಣ್ಣ ಅವರು ಒಳ್ಳಯೆ ಕೆಲಸ ಮಾಡಿ ಹೆಸರುಗಳಿಸಲಿ. ಸೂರಜ್ ಅಪಾರ ಅಭಿಮಾನಿ ಬಳಗ ಹೊಂದಿದ್ದರೂ ರಾಜಕೀಯ ಪ್ರವೇಶಿಸಲು ಸಾಕಷ್ಟು ಸಮಯ ಇದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಎಲ್ಲ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪ ಕಚೇರಿ ಎದುರು ಸೋಮವಾರ ನಡೆಸಲು ಉದ್ದೇಶಿಸಿದ ಪ್ರತಿಭಟನೆಯನ್ನುಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ದೂರವಾಣಿ ಮೂಲಕ ಸಿ.ಎಂ. ಅವರು ಗೌಡರ ಜತೆ ಸಮಾಲೋಚನೆ ನಡೆಸಿದ್ದಾರೆ. ಮಾತುಕತೆ ವಿವರ ಗೊತ್ತಿಲ್ಲ. ಜಿಲ್ಲೆ ಅಭಿವೃದ್ಧಿಯಾಗದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ ಎಂದುತಿಳಿಸಿದರು.
ಮುಂಬರುವ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಕುರಿತು ಚರ್ಚಿಸಲು ಫೆ.13ರಂದು ಎಚ್.ಡಿ.ದೇವೇಗೌಡರು ಪಕ್ಷದ ಮುಖಂಡರ ಸಭೆ ಕರೆದಿದ್ದಾರೆ. ಪಕ್ಷ ಸಂಘಟನೆಗೂ ಒತ್ತು ನೀಡಲಾಗುವುದುಎಂದರು.
ಹಾಸನ ರೈಲ್ವೆ ಮೇಲ್ಸೇತುವೆಗೆ ಜಾಗ ಬಿಟ್ಟು ಕೊಡುವ ವಿಚಾರದಲ್ಲಿ ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಕಾನೂನು ಎಲ್ಲರಿಗೂ ಒಂದೇ. ಎನ್.ಆರ್.ವೃತ್ತದಿಂದ ತಣ್ಣೀರು ಹಳ್ಳದವರೆ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳು ಅಕ್ರಮ. ಯಾರೂ ನಿಯಮ ಪಾಲಿಸಿಲ್ಲ. ಬಿಜೆಪಿಗೆ ಮತ ಹಾಕುವುದಿಲ್ಲವೆಂಬ ಕಾರಣಕ್ಕೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ತೊಂದರೆ ನೀಡಬಾರದು. ಕಾಮಗಾರಿಗೆ ಜಾಗಬಿಟ್ಟು ಕೊಡುವವರಿಗೆ ನ್ಯಾಯಯುತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.