
ಆಲೂರು: ಪ್ರತಿಯೊಬ್ಬರೂ ದೇಸಿ ಉತ್ಪನ್ನಗಳನ್ನು ಖರೀದಿಸಿ ಬಳಸುವ ಮೂಲಕ ಸ್ವಾವಲಂಬಿ ಮತ್ತು ಆರ್ಥಿಕ ಸದೃಢ ದೇಶವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಸಮಿತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಅಮೆರಿಕ ನಮ್ಮ ದೇಶದ ಉತ್ಪನ್ನಗಳ ಮೇಲೆ ಶೇ 50 ರಷ್ಟು ಸುಂಕ ವಿಧಿಸಲು ಮುಂದಾಗಿದೆ. ಆದರೆ ನಮ್ಮ ಪ್ರಧಾನ ಮಂತ್ರಿ ಇಂತಹ ಬೆದರಿಕೆಗೆ ಬಗ್ಗದೆ, ಸ್ವದೇಶಿ ಉತ್ಪನ್ನಗಳನ್ನು ಕೊಂಡು ಬಳಸಲು ಮನವಿ ಮಾಡಿದ್ದಾರೆ. ಎಲ್ಲರೂ ಕೈ ಜೋಡಿಸಿದರೆ ಮುಂದಿನ 10 ವರ್ಷಗಳಲ್ಲಿ ದೇಶ ಸಂಪದ್ಭರಿತ ದೇಶವಾಗುತ್ತದೆ. ವಿದ್ಯಾರ್ಥಿಗಳು ದೇಶದ ಸಂಪತ್ತಾಗಿ ಬೆಳೆಯಬೇಕು’ ಎಂದರು.
ಖಾಸಗಿ ಶಾಲೆ ವ್ಯಾಮೋಹದಿಂದ ಹೊರಬಂದು ಸರ್ಕಾರಿ ಶಾಲೆ, ಕಾಲೇಜುಗಳನ್ನು ಉಳಿಸಲು ಪೋಷಕರು, ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.
ಭಾರತೀಯ ರೆಡ್ಕ್ರಾಸ್ ಸೊಸೈಟಿ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ.ಮೋಹನ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಸಹ ಪಠ್ಯ ಚಟುವಟಿಕೆಗಳಿಗೆ ಸಮಾನ ಆದ್ಯತೆ ನೀಡಬೇಕು ಎಂದರು.
ಹಾಸನ ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ಮಂಜೇಗೌಡ ಮಾತನಾಡಿದರು. ಪ್ರಾಂಶುಪಾಲ ಟಿ. ಪಿ. ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಎನ್.ಎಸ್.ಶಂಕರಲಿಂಗೇಗೌಡ, ಎಂ.ಬಾಲಕೃಷ್ಣ, ಎಂ.ಪಿ.ಹರೀಶ್, ಪ್ರಾಧ್ಯಾಪಕರಾದ ಕೆ.ಎನ್.ರಮೇಶ್, ಜಿ.ಪುರುಷೋತ್ತಮ, ಆರ್.ವಿ.ಮನು, ಕಚೇರಿ ಅಧೀಕ್ಷಕ ಕೆ.ವಿ.ರವಿಪ್ರಕಾಶ್, ರವಿ ಮಾವನೂರು, ನಂಜುಂಡಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.