ಅರಸೀಕೆರೆ: ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಪಡುವನಹಳ್ಳಿ ಭೋವಿ ಕಾಲೊನಿ ನಿವಾಸಿ ಸೊಲ್ಲಾಪುರಿ ಭೋವಿ ಅವರು ವಾಂತಿ, ಭೇದಿಯಿಂದ ಮೃತಪಟ್ಟಿ ರುವುದರಿಂದ ತಹಶೀಲ್ದಾರ್ ಸಂತೋಷ್ ಕುಮಾರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು,
ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದರು. ಇಲ್ಲಿನ ನೀರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ನೀಡದೆ, ವೈದ್ಯರ ನಿರ್ಲಕ್ಷ್ಯದಿಂದ ಸೆ.15ರಂದು ಸೊಲ್ಲಾಪುರಿ ಬೋವಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವುದರಿಂದ ಇಲಾಖೆ ಅಧಿಕಾರಿಗಳು, ವೈದ್ಯರ ತಂಡದಿಂದ ಪರಿಶೀಲನೆ ನಡೆಸಲಾಯಿತು. ಕುಡಿಯುವ ನೀರಿನಲ್ಲಿ ಸಮಸ್ಯೆ ಇರಬಹುದು ಎಂಬ ಶಂಕೆಯಿಂದ ಕುಡಿಯುವ ನೀರನ್ನು ವೈದ್ಯಕೀಯ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದರು.
ಗ್ರಾಮಸ್ಥರ ಆರೋಗ್ಯವನ್ನು ತಪಾಸಣೆ ನಡೆಸಿದ್ದು, ನೀರಿನ ವೈದ್ಯಕೀಯ ಪರೀಕ್ಷೆಯ ವರದಿ ಬರುವವರೆಗೂ ಗ್ರಾಮಸ್ಥರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಒದಗಿಸಲಾಗುವುದು. ಈ ರೀತಿಯ ತೊಂದರೆ ಇರುವ ಗ್ರಾಮಗಳಲ್ಲಿ ಗ್ರಾಮಸ್ಥರು ಪ್ರತಿ ದಿನ ಬಿಸಿ ನೀರನ್ನು ಕುಡಿಯಲು ಬಳಸಬೇಕು. ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದರೆ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದು ತಿಳಿಸಿದರು.
ಗ್ರಾಮಸ್ಥರು ಭೀತಿಗೊಳಗಾಗ ಬಾರದು. ಗ್ರಾಮದಲ್ಲಿ ಏನೇ ತೊಂದರೆ ಇದ್ದರೂ ಗ್ರಾಮ ಪಂಚಾಯಿತಿ ಕಚೇರಿ ಹಾಗೂ ತಾಲ್ಲೂಕು ಕಚೇರಿ ಸಂಪರ್ಕಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಹಾಗೂ ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.