ಹಾಸನ: ‘ಹೇಮಾವತಿ ಜಲಾಶಯ ಯೋಜನೆಯ ಮುಳುಗಡೆ ಸಂತ್ರಸ್ತರಿಗೆ ಜಮೀನು ಮಂಜೂರು ಮಾಡುವ ವಿಚಾರದಲ್ಲಿ ಅಕ್ರಮ ನಡೆದಿದ್ದರೆ ಕಡತಗಳನ್ನು ಪರಿಶೀಲಿಸಿ ಕ್ರಮ ಕೈಗೊಂಡು ವರದಿ ಸಲ್ಲಿಸಿ’ ಎಂದು ರಾಜ್ಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತ ಹಾಗೂ ಕಂದಾಯ ಇಲಾಖೆ ಪದನಿಮಿತ್ತ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಹೇಮಾವತಿ ಜಲಾಶಯ ಯೋಜನೆಯ ಮುಳುಗಡೆ ಸಂತ್ರಸ್ತರಿಗೆ ಜಮೀನು ಮಂಜೂರು ಸಂಬಂಧ ನಡೆದ ಸಭೆಯಲ್ಲಿ ಈ ಸೂಚನೆ ನೀಡಿದರು.
‘ಅಧಿಕಾರ ದುರ್ಬಳಕೆ ಮಾಡಿಕೊಂಡು ಭೂಸಂತ್ರಸ್ತರಿಗೆ ಮೀಸಲಿರಿಸಿದ ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ಕರ್ತವ್ಯಲೋಪ ಎಸಗಿರುವ ಸಂಬಂಧ ದೂರು ದಾಖಲಾಗಿದ್ದು, ಲಭ್ಯವಿರುವ ಎಲ್ಲಾ ಕಡತಗಳನ್ನು ಪರಿಶೀಲಿಸಿ, ಕಡತದಲ್ಲಿ ನ್ಯೂನತೆಗಳಿದ್ದಲ್ಲಿ ಪಟ್ಟಿ ಮಾಡಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್, ಗಿರೀಶ್ ನಂದನ್, ವಿಶೇಷ ಭೂಸ್ವಾಧೀನಾಧಿಕಾರಿ, ಹೇಮಾವತಿ ಜಲಾಶಯ ಯೋಜನೆ ಹಾಸನ ಹಾಗೂ ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತ ಬೆಂಗಳೂರು ಕಚೇರಿಯ ಅಧಿಕಾರಿಗಳು ಹಾಗೂ ಪೊಲೀಸ್ ತನಿಖಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.