ಹಾಸನ: "ತ್ಯಾಗಮಯಿ ಶಿಕ್ಷಕರನ್ನು ಗೌರವಿಸುವ ಶ್ರೇಷ್ಠ ಸಂಪ್ರದಾಯ ನಮ್ಮದು' ಎಂದು ಶಾಸಕ ಪ್ರೀತಂ ಜೆ. ಗೌಡ ಹೇಳಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕ ಗುರುವಾರ
ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
‘ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಶಿಕ್ಷಕರನ್ನು ಗೌರವಿಸುವ ಸಂಪ್ರದಾಯವನ್ನು
ಬಾಲ್ಯದಿಂದಲೇ ರೂಢಿಸಿಕೊಂಡು ಬಂದಿದ್ದೇನೆ. ಪಾಲಕರು ತಮ್ಮ ಮಕ್ಕಳ ನಿಗಾ ವಹಿಸಲು ಸಾಧ್ಯವಾಗದೆ ಶಾಲೆಗೆ ಬಿಟ್ಟು ಬರುತ್ತಾರೆ. ಆದರೆ ಶಿಕ್ಷಕರು ತಮ್ಮ ವೈಯಕ್ತಿಕ ಜೀವನವನ್ನು ಮರೆತು ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ಬೆಳೆಸುತ್ತಾರೆ. ತಾನು ಕಲಿಸಿದ ಮಗು ಎಷ್ಟೇ ಎತ್ತರಕ್ಕೆ ಬೆಳೆದರೂ ಗರ್ವ ಪಡದೆ ಇತರರ ಏಳಿಗೆಯಲ್ಲಿ ಸಂತಸ ಪಡುತ್ತಾರೆ. ಮುಂದಿನ ವರ್ಷ ಮಹಿಳಾ ದಿನಾಚರಣೆಯನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸಲಾಗುವುದು’ ಎಂದು ತಿಳಿಸಿದರು.
ಹಾರ್ವರ್ಡ್ ಶಾಲೆ ಪ್ರಾಂಶುಪಾಲ ರವಿಕುಮಾರ್ ಅವರು '2021ರ ರಾಷ್ಟ್ರೀಯ ಶಿಕ್ಷಣ ನೀತಿ'ಯ ಸಮಗ್ರ ಚಿತ್ರಣ
ವಿವರಿಸಿದರು. ಇದುವರೆಗೆ ಬಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಗಳು, ಇದರ ಅನುಷ್ಠಾನದಲ್ಲಿ ಪ್ರಾಥಮಿಕ ಶಿಕ್ಷಣ
ಹಾಗೂ ಶಿಕ್ಷಕರು ಎದುರಿಸಬೇಕಿರುವ ಸವಾಲು ಹಾಗೂ ಸಾಧಕಗಳ ಕುರಿತು ಬೆಳಕು ಚೆಲ್ಲಿದರು.
ತಾಲ್ಲೂಕಿನ 36 ಕ್ಲಸ್ಟರ್ ಶಿಕ್ಷಕಿಯರಿಗೆ ಅನುಪಮ ಸೇವಾ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಂಜಿನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್. ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಬಲರಾಂ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಡಿ. ರಮೇಶ್, ಅಣ್ಣಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಭಾನುಮತಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.