ಹಾಸನ: ‘ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ಗೆ ತಕ್ಕ ಕಲಿಸುತ್ತೇವೆ’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹಿಂದಿನ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಿ ತಪ್ಪು ಮಾಡಿದೆವು. ಹೈಕಮಾಂಡ್ ಆದೇಶದಿಂದ ಅನಿವಾರ್ಯವಾಗಿ ಬೆಂಬಲಿಸಬೇಕಾಯಿತು. ಚುನಾವಣೆ ಗೆದ್ದ ನಂತರ ಸೌಜನ್ಯಕ್ಕೂ ಕಾಂಗ್ರೆಸ್ ನಾಯಕರನ್ನು ಮಾತನಾಡಿಸಲಿಲ್ಲ. ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕರ ಮನೆಗೆ ಬಂದು ಕಾಲಿಗೆ ಬಿದ್ದರು. ಗೆದ್ದ ನಂತರ ಕೃತಜ್ಞತೆ ಸಲ್ಲಿಸಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಎಂ.ಶಂಕರ್ ಮಾತನಾಡಿ, ‘ನ. 23ರಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಮೂರು ದಶಕಗಳಿಂದ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ತಮ್ಮ ಪರವಾಗಿ ಗಟ್ಟಿಯಾಗಿ ನಿಲ್ಲುತ್ತಾರೆ ಎಂಬ ವಿಶ್ವಾಸವಿದೆ. ಜನರು ಕೂಡ ಬದಲಾವಣೆ ಬಯಸುತ್ತಿರುವುದರಿಂದ ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧೆ ಕಷ್ಟ ಅಂತ ಎನಿಸುತ್ತಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.