ಹಾಸನ: ರಾಜ್ಯ ಸರ್ಕಾರ ಬರ ಪರಿಹಾರ ವಿತರಣೆಯಲ್ಲಿ ಲೋಪ ಎಸಗುತ್ತಿದ್ದು, ಇದೀಗ ಜಿಲ್ಲಾಧಿಕಾರಿ ಖಾತೆಗೆ ಬಿಡುಗಡೆ ಮಾಡಿರುವ ಪರಿಹಾರದ ಹಣವನ್ನು ಖರ್ಚು ಮಾಡಲು ಕೆಲ ಮಾರ್ಗಸೂಚಿ ಹೊರಡಿಸಿರುವ ಕಾರಣ ನಯಾ ಪೈಸೆ ಕೂಡ ಬಳಕೆಯಾಗುತ್ತಿಲ್ಲ ಎಂದು ಶಾಸಕ ಎಚ್.ಡಿ. ರೇವಣ್ಣ ಆರೋಪಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಖಾತೆಗೆ ₹12 ಕೋಟಿಯನ್ನು ಸರ್ಕಾರ ಜಮೆ ಮಾಡಿದೆ. ಇದರಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹50 ಲಕ್ಷದಂತೆ ₹4 ಕೋಟಿಯನ್ನು ಹಂಚಿಕೆ ಮಾಡಲಾಗಿದೆ ಎಂದರು.
ಆದರೆ ಹಂಚಿಕೆ ಮಾಡಿರುವ ಹಣವನ್ನು ಬರ ಪರಿಸ್ಥಿತಿ ಸಂದರ್ಭದಲ್ಲಿ ಕೊಳವೆಬಾವಿ ಕೊರೆಸಲು, ರಸ್ತೆ ಅಭಿವೃದ್ಧಿ, ಶಾಲಾ ಕಟ್ಟಡ ಅಭಿವೃದ್ಧಿ ಸೇರಿದಂತೆ ಇತರೆ ಕಾಮಗಾರಿಗಳಿಗೆ ಬಳಸುವಂತಿಲ್ಲ ಎಂದು ನಿಬಂಧನೆಗಳನ್ನು ಹಾಕಲಾಗಿದೆ. ಇದರಿಂದ ಬರ ಪರಿಸ್ಥಿತಿ ನಿಭಾಯಿಸಲು ಹಾಗೂ ಪರಿಹಾರ ವಿತರಣೆಗೆ ಹಿನ್ನಡೆಯಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಬರ ನಿರ್ವಹಣೆ ಮಾಡುತ್ತಿಲ್ಲ. ಇದರಿಂದ ಜನರು ಪರಿತಪಿಸುವಂತಾಗಿದೆ. ಕೇವಲ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಕಾಲ ಕಳೆಯುತ್ತಿರುವ ಇವರಿಂದ ಜನರ ಕಷ್ಟಗಳು ಪರಿಹಾರ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೇಮಾವತಿ ಬಲದಂಡ ನಾಲೆ, ಶ್ರೀರಾಮದೇವರ ಕಟ್ಟೆ ಸೇರಿದಂತೆ ಅನೇಕ ನೀರು ಸರಬರಾಜು ನಾಲೆಗಳಲ್ಲಿ ಗಿಡಗಂಟಿ ಬೆಳೆದು ಹೂಳು ತುಂಬಿದ್ದು, ಇದರ ದುರಸ್ತಿಗೂ ಸಹ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ. ಬಹುತೇಕ ವಿತರಣೆ ನಾಲೆಗಳಲ್ಲಿ ಮಣ್ಣು ತುಂಬಿದ್ದು, ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಸಚಿವರಿಗೆ, ಸರ್ಕಾರಕ್ಕೆ ಪತ್ರ ಬರೆದರೂ ಪ್ರಯೋಜನವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
₹12 ಕೋಟಿಯಲ್ಲಿ ₹4 ಕೋಟಿ ಬಿಡುಗಡೆ ಮಾಡಿದ್ದು ಇನ್ನೂ ₹8 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿಯೇ ಉಳಿದಿದೆ. ಬರಗಾಲದಲ್ಲಿ ಈ ಹಣವನ್ನು ಬಳಕೆ ಮಾಡಲು ಸರ್ಕಾರದ ಮಾರ್ಗಸೂಚಿ ಅಡ್ಡಿಯಾಗಿದೆಎಚ್.ಡಿ. ರೇವಣ್ಣ ಶಾಸಕ
ಕುಡಿಯುವ ನೀರು ಮೇವು ಸೇರಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹50 ಲಕ್ಷ ಬಿಡುಗಡೆ ಮಾಡಲಾಗಿದೆ. ಹಣ ಖರ್ಚಾದ ನಂತರ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು.ಸಿ.ಸತ್ಯಭಾಮಾ ಜಿಲ್ಲಾಧಿಕಾರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.