ADVERTISEMENT

ತನಿಖೆ ಬಳಿಕ ಸಿ.ಡಿ ಬಗ್ಗೆ ಸತ್ಯಾಂಶ ತಿಳಿಯಲಿದೆ: ಸಚಿವ ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2021, 13:33 IST
Last Updated 13 ಮಾರ್ಚ್ 2021, 13:33 IST
ಕೆ.ಗೋಪಾಲಯ್ಯ
ಕೆ.ಗೋಪಾಲಯ್ಯ   

ಹಾಸನ: ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದ ವಿಚಾರಣೆಗಾಗಿ ಬೆಂಗಳೂರು ಹೆಚ್ಚುವರಿ ಪೊಲೀಸ್‌ ಕಮಿಷನ್‌ ಸೌಮೆಂದು ಮುಖರ್ಜಿನೇತೃತ್ವದಲ್ಲಿ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಿದ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂರು ದಿನಗಳ ಹಿಂದೆ ತನಿಖೆ ಆರಂಭಗೊಂಡಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸರ್ಕಾರಕ್ಕೆ ವರದಿಸಲ್ಲಿಸಲಾಗುತ್ತದೆ. ಅಲ್ಲಿವರೆಗೂ ಕಾಯಬೇಕು. ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ತಂಡಕ್ಕೆ ಸರ್ಕಾರ ಅನುಮತಿ ನೀಡಿದೆ. ಆದ್ದರಿಂದ ತನಿಖಾ ಹಂತದಲ್ಲಿ ಈ ವಿಚಾರ
ಮಾತನಾಡುವುದು ಸರಿಯಲ್ಲ ಎಂದರು.

ಎಸ್‌ಐಟಿ ತನಿಖೆ ಕುರಿತು ವಿರೋಧ ಪಕ್ಷಗಳ ನಾಯಕರು ಮಾಡಿರುವ ಆರೋಪಕ್ಕೆಪ್ರತಿಕ್ರಿಯಿಸಲು ನಿರಾಕರಿಸಿದ ಸಚಿವರು, ವಿಶೇಷ ತನಿಖಾ ತಂಡದ ಮೇಲೆ ವಿಶ್ವಾಸಇಟ್ಟುಕೊಳ್ಳಬೇಕು. ತನಿಖೆಗೂ ಮುನ್ನವೇ ನಿರ್ಧಾರಕ್ಕೆ ಬರಬಾರದು ಎಂದರು.

ADVERTISEMENT

ಹಾಸನ ಜಿಲ್ಲೆಯ ಸಹಕಾರ ಸಂಘಗಳ ಸಹಾಯಕ ಅಭಿವೃದ್ಧಿ ಅಧಿಕಾರಿ ವಿ. ಸುನಿಲ್‌ ಮತ್ತುಸಹಕಾರ ಸಂಘಗಳ ಸಹಾಯಕ ನಿಬಂಧಕ ನಾರಾಯಣ್ ಅವರು ಕಾನೂನು ಮೀರಿಕೆಲಸ ಮಾಡಿರುವ ವಿಚಾರ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಅರ್ಧ ತಾಸು ಚರ್ಚೆ ಆಗಿದೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ. ಅಧಿಕಾರಿಗಳು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಾಗುವುದು. ಈಬಗ್ಗೆ ಸಹಕಾರ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಕೋವಿಡ್‌ನಿಂದ ದೇಶ ತತ್ತರಿಸಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನೆಡೆಯಾಗಿದೆ. ಈಗಚೇತರಿಸಿಕೊಂಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಬೆಂಗಳೂರು ಸೇರಿದಂತೆ ಕೆಲವುಕಡೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೋವಿಡ್‌ ನಿಯಂತ್ರಣಕ್ಕೆ ಬಂದಿರುವ ಕಡೆ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.