ಹಾಸನ: ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರದ ಎಂ.ಜಿ. ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರು ಗುರುವಾರ ಧರಣಿ ನಡೆಸಿದರು.
ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿರುವ ಕಾರಣ ಕಾಲೇಜಿನಲ್ಲಿ ಪೂರ್ಣ ಪ್ರಮಾಣದ ತರಗತಿಗಳು ನಡೆಯುತ್ತಿಲ್ಲ. ಕೆಲವು ವಿಷಯಗಳಿಗೆ ಕಾಯಂ ಉಪನ್ಯಾಸಕರು ಇಲ್ಲ. ಕೆಲವರಿಗೆಅರ್ಧ ದಿನ ಮಾತ್ರವೇ ತರಗತಿಗಳು ನಡೆಯುತ್ತಿವೆ. ಇದರಿಂದಾಗಿ ವಿದ್ಯಾರ್ಥಿಗಳು ಕಲಿಕೆಯಲ್ಲಿಹಿಂದುಳಿಯುವ ಸಾಧ್ಯತೆ ಇದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ಬಿಸಿಎ, ಬಿ.ಕಾಂ ಸೇರಿದಂತೆ ಅನೇಕ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳು ನಡೆದಿಲ್ಲ. ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಭಾಗದಿಂದ ಬರುತ್ತಾರೆ. ನಿತ್ಯ 6 ತರಗತಿಗಳು ನಡೆಯಬೇಕು. ಆದರೆ, ಅತಿಥಿ ಉಪನ್ಯಾಸಕರು ಇಲ್ಲದ ಕಾರಣ ನಿತ್ಯ ಒಂದು, ಇಲ್ಲವೇ ಮೂರು ತರಗತಿಗಳು, ಕೆಲವರಿಗೆ ಒಂದೂ ತರಗತಿಯೂ ನಡೆಯುತ್ತಿಲ್ಲ. ನಿತ್ಯ 30, 40 ಕಿ.ಮೀ. ದೂರದಿಂದ ಕಾಲೇಜಿಗೆ ಬಂದರೂ ತರಗತಿಗಳು ನಡೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
‘ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ರಾಜ್ಯ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಿ ಮುಷ್ಕರ ಕೈಬಿಡುವಂತೆ ಮನವೊಲಿಸಬೇಕು. ಪೂರ್ಣ ಪ್ರಮಾಣದ ತರಗತಿಗಳು ನಡೆಯುವ ವರೆಗೂಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರಾದ ಧನುಶ್ರೀ, ಜಿ.ಪಿ. ಧಾಮಿನಿ, ಹೇಮಲತಾ, ಶ್ವೇತಾ, ಅಂಜಲಿ, ಬಿಂದುಶ್ರೀ, ಭೂಮಿಕಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.