ADVERTISEMENT

ಹಾಸನ: ನಗರಸಭೆ ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ

ಚುನಾವಣಾಧಿಕಾರಿ ವಿರುದ್ಧವೇ ಜೆಡಿಎಸ್ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2020, 12:37 IST
Last Updated 29 ಅಕ್ಟೋಬರ್ 2020, 12:37 IST

ಹಾಸನ: ಚುನಾವಣಾ ನೋಟಿಸ್‌ನಲ್ಲಿನ ಗೊಂದಲದಿಂದಾಗಿ ನಿಗದಿತ ಸಮಯಕ್ಕೆ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸಾಧ್ಯವಾಗಲಿಲ್ಲವೆಂದು ಜೆಡಿಎಸ್‌ ಸದಸ್ಯರು ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರಿಂದ ನಗರಸಭೆ ಉಪಾಧ್ಯಕ್ಷ ಸ್ಥಾನದ ಚುನಾವಣೆಯನ್ನು ಚುನಾವಣಾಧಿಕಾರಿ ಬಿ.ಎ.ಜಗದೀಶ್‌ ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಗುರುವಾರ ಮಧ್ಯಾಹ್ನ ಚುನಾವಣೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದವರ ಹೆಸರನ್ನು ಚುನಾವಣಾಧಿಕಾರಿ ಪ್ರಕಟಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್‌ ಸದಸ್ಯರು, ‘ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಹೋದಾಗ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಯಾರೂ ಇರಲಿಲ್ಲ. ದಯವಿಟ್ಟು ನಾಮಪತ್ರ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಬೇಕು’ ಎಂದು ಪಟ್ಟು ಹಿಡಿದರು.

‘ಬೆಳಿಗ್ಗೆ 9 ರಿಂದ 11.05 ರವರೆಗೂ ನಗರಸಭೆ ಕಚೇರಿಯಲ್ಲಿದ್ದೆ. ಯಾರೂ ಬಂದಿಲ್ಲ’ ಎಂದು ಚುನಾವಣಾಧಿಕಾರಿ
ಸ್ಪಷ್ಪಪಡಿಸಿದರು. ಒಂದು ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಜೆಡಿಎಸ್‌ ಸದಸ್ಯರು ಆರೋಪಿಸಿ ಚುನಾವಣಾಧಿಕಾರಿ ವಿರುದ್ಧವೇ ಪ್ರತಿಭಟನೆ ನಡೆಸಿದರು. ಜೆಡಿಎಸ್‌, ಬಿಜೆಪಿ ಸದಸ್ಯರು ಪರಸ್ಪರ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದರು.ಸಭೆಯಲ್ಲಿ ಗದ್ದಲ ಉಂಟಾಯಿತು.

ADVERTISEMENT

‘ಚುನಾವಣೆ ಮುಂದೂಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಇದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು’ ಎಂದು ಸಭೆ ಬಳಿಕ ಶಾಸಕ ಪ್ರೀತಂ ಗೌಡ ಹೇಳಿದರು.

‘ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಸದಸ್ಯ ಮೋಹನ್‌ ಅವರು ಪರಿಶಿಷ್ಟ ಪಂಗಡಕ್ಕೆ ಸೇರಿದವರಲ್ಲ. ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದಾರೆ. ಸದಸ್ಯ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಜೆಡಿಎಸ್ ಸದಸ್ಯರು ಇದೇ ವೇಳೆ ತಕಾರರು ಅರ್ಜಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.