ಹೆತ್ತೂರು: ಗುಂಡಿ ಬಿದ್ದ ರಸ್ತೆಗಳ ದುರಸ್ತಿಗೆ ಮನವಿ ಮಾಡಿ ಬೇಸತ್ತ ಗ್ರಾಮಸ್ಥರು, ಕೊನೆಗೆ ತಮ್ಮದೇ ಹಣದಲ್ಲಿ ಗುಂಡಿಗೆ ಮಣ್ಣು ಹಾಕಿ ದುರಸ್ತಿ ಮಾಡಿದ್ದಾರೆ. ಹೋಬಳಿಯ ಅತ್ತಿಹಳ್ಳಿ ಗ್ರಾಮಸ್ಥರು ಗುಂಡಿಗಳಿಗೆ ಮಣ್ಣು ಹಾಕಿ, ತಾತ್ಕಾಲಿಕವಾಗಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಎತ್ತಿನಹೊಳೆ ಯೋಜನೆ ಅಡಿಯಲ್ಲಿ ಇಡೀ ಮಲೆನಾಡು ಭಾಗದಲ್ಲಿ ಕಾಂಕ್ರೀಟ್ ರಸ್ತೆಗಳಾಗಿ ಹಲವು ವರ್ಷಗಳಾಗಿವೆ. ಅತ್ತಿಹಳ್ಳಿ ಗ್ರಾಮದ ಆಸ್ಪತ್ರೆ ವೃತ್ತದಿಂದ ಅತ್ತಿಹಳ್ಳಿ ಗ್ರಾಮದ ಒಳಗೆ ಹೋಗುವ ಸುಮಾರು 500 ಮೀಟರ್ನಷ್ಟು ರಸ್ತೆ ಬಾಕಿ ಉಳಿದಿದೆ. ಕಾಂಕ್ರೀಟ್ ರಸ್ತೆ ನಿರ್ಮಿಸುವಂತೆ ಹಲವು ವರ್ಷಗಳಿಂದ ಗ್ರಾಮಸ್ಥರು ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ, ನಿರ್ಲಕ್ಷ ವಹಿಸಿದ್ದಾರೆ. ನಿತ್ಯ ಸಂಚಾರ ಮಾಡುವ ಬಸ್ಗಳು, ವಾಹನಗಳಿಗೆ ಸಮಸ್ಯೆ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಇದೀಗ ಈ ಭಾಗದಲ್ಲಿ ಭಾರಿ ಮಳೆಯಿಂದ ಈ ರಸ್ತೆಯಲ್ಲಿ ಮತ್ತೆ ಗುಂಡಿಗಳು ರಾರಾಜಿಸುತ್ತಿವೆ. ಗ್ರಾಮಸ್ಥರು ಸ್ವಂತ ಹಣದಿಂದ ಪ್ರತಿ ವರ್ಷವೂ ಗುಂಡಿ ಮುಚ್ಚಿ, ರಸ್ತೆ, ಚರಂಡಿ ವ್ಯವಸ್ಥೆ ಮಾಡುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯವರು, ಜನಪ್ರತಿನಿಧಿಗಳು ಇತ್ತ ಗಮನ ಹರಿಸಬೇಕು. ಬಾಕಿ ಉಳಿದಿರುವ ರಸ್ತೆಗೆ ಕಾಂಕ್ರೀಟ್ ಹಾಕಿಸುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.