
ಹೊಳೆನರಸೀಪುರ: ‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ, ಹಕ್ಕುಗಳ ರಕ್ಷಣೆಗೆ, ಹಲವಾರು ಕಾನೂನುಗಳಿದ್ದು, ಅವುಗಳ ಬಗ್ಗೆ ತಿಳಿದುಕೊಂಡು ನ್ಯಾಯ ಪಡೆದುಕೊಳ್ಳಿ’ ಎಂದು ಸಿವಿಲ್ ನ್ಯಾಯಾಧೀಶರಾದ ಚೇತನಾ ಸಲಹೆ ನೀಡಿದರು.
ಇಲ್ಲಿನ ಪುರಸಭಾ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಮಹಿಳೆಯರು ಮತ್ತೊಬ್ಬ ಮಹಿಳೆ ಮೇಲೆ ದೌರ್ಜನ್ಯ ನಡೆದಾಗ ಅವರಿಗೆ ನೆರವು ನೀಡಲು ಮುಂದಾಗಬೇಕು’ ಎಂದರು.
ಡಿವೈಎಸ್ಪಿ ಶಾಲೂ ಮಾತನಾಡಿ, ‘ಮಹಿಳೆಯರು ಅಗತ್ಯ ಸಮಯದಲ್ಲಿ ಪೊಲೀಸರ ನೆರವು ಪಡೆದುಕೊಳ್ಳಬೇಕು. ಹತ್ತಿರದ ಪೊಲೀಸ್ ಠಾಣೆಯಲ್ಲಿ ನಿಮಗೆ ನ್ಯಾಯ ದೊರೆಯುವುದಿಲ್ಲ ಎನಿಸಿದಾಗ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕು. ತಪ್ಪುಗಳು ನಡೆದಾಗ ಅವುಗಳನ್ನು ಸಹಿಸಿಕೊಂಡರೆ ಮತ್ತೊಂದು ತಪ್ಪು ಮಾಡಲು ಪ್ರೇರೇಪಿಸಿದಂತಾಗುತ್ತದೆ’ ಎಂದರು.
ತಹಶೀಲ್ದಾರ್ ವೈ.ಎಂ.ರೇಣುಕುಮಾರ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ವಿ.ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಜಿ. ಮುನಿರಾಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಹಿರಿಯ ವಕೀಲ ಕೆ.ಆರ್. ಜಯಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ಶಿವಶಂಕರ್, ನ್ಯಾಯಾಂಗ ಇಲಾಖೆಯ ಕುಮಾರ್, ಪುರಸಭೆ, ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.