
ಅರಸೀಕೆರೆ: ‘2025- 26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ನೊಂದಣಿಯಾದ ವಿದ್ಯಾರ್ಥಿಗಳು ಗೈರು ಹಾಜರಾಗದಂತೆ ಗಮನವಹಿಸಬೇಕು. ಪ್ರತಿ ಶಾಲೆಯು ಶೇ 100ರಷ್ಟು ಫಲಿತಾಂಶ ಬರಲು ಶಿಕ್ಷಕರು ಜವಾಬ್ದಾರಿ ವಹಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು.
ನಗರದ ಕೋಡಿಮಠದ ಬಸವೇಶ್ವರ ಪ್ರೌಢಶಾಲೆ ಮತ್ತು ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆದ ಶಿಕ್ಷಕರ ಕಾರ್ಯಾಗಾರದಲ್ಲಿ ಮಾತನಾಡಿದರು.
‘ಗೈರಾದ ವಿದ್ಯಾರ್ಥಿಗಳು ಮತ್ತೊಂದು ಪರೀಕ್ಷೆ ಎದುರಿಸಿ ಉತ್ತೀರ್ಣರಾಗುವ ಸಂಭವ ಕಡಿಮೆ, ಶೇ 100ರಷ್ಟು ಫಲಿತಾಂಶ ಸಾಧಿಸಲು ನೀಲನಕ್ಷೆ, ಮಾದರಿ ಪ್ರಶ್ನೆ ಪತ್ರಿಕೆಗಳು ಸಹಕಾರಿಯಾಗಲಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆಯಲು ಯಾವ ಅಂಶಗಳಿಗೆ ಒತ್ತು ಕೊಡಬೇಕು ಎಂಬುದನ್ನು ನೀವು ತಿಳಿದುಕೊಳ್ಳಬೇಕು ಕಲಿಕೆಯಲ್ಲಿ ಹಿಂದಿರುವ ಮಕ್ಕಳಿಗೆ ಶಿಕ್ಷಕರು ವಿಶೇಷ ಗಮ ಕೊಡಬೇಕು’ ಎಂದರು.
‘ಯಾವ ವಿದ್ಯಾರ್ಥಿಯು ಡ್ರಾಪ್ ಔಟ್ ಆಗಬಾರದು ತರಗತಿಗೆ ಗೈರಾಗುವ ವಿದ್ಯಾರ್ಥಿಗಳ ಬಗ್ಗೆ ಶಿಕ್ಷಕರು ಕಾಳಜಿ ವಹಿಸಬೇಕು. ಅವರನ್ನು ಸಂಪರ್ಕಿಸಿ ವಿದ್ಯಾರ್ಥಿಗಳ ಮನವೊಲಿಸಬೇಕು. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಜೀವನದ ಒಂದು ಹಂತವಾಗಿದ್ದು, ಶಿಕ್ಷಕರು ನಿಗಾವಹಿಸಬೇಕು’ ಎಂದು ಕಿವಿ ಮಾತು ಹೇಳಿದರು.
ಹಾಸನ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಉಪಯೋಜನಾಧಿಕಾರಿ ಚಂದ್ರಯ್ಯ ಮಾತನಾಡಿ, ‘ಪರೀಕ್ಷೆಗೆ ನೋಂದಣಿಯಾದ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು. ಒಬ್ಬ ವಿದ್ಯಾರ್ಥಿ ಗೈರಾದರೂ ಶೇ 100 ಫಲಿತಾಂಶದಿಂದ ಶಾಲೆಗೆ ಹಿನ್ನಡೆಯಾಗುತ್ತದೆ, ಇಲಾಖೆಯ ಹಿರಿಯ ಅಧಿಕಾರಿಗಳ ಆಶಯ ಈಡೇರಲು ಇತ್ತ ಹೆಚ್ಚಿನ ಗಮನ ಕೊಡಿ’ ಎಂದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ನಟರಾಜ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.