ಚನ್ನರಾಯಪಟ್ಟಣ: ‘ಎಚ್ಐವಿ ಪೀಡಿತರನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕು’ ಎಂದು ಶಾಸಕ.ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದಲ್ಲಿ ಶನಿವಾರ ವೈದ್ಯ ನರ್ಸಿಂಗ್ ಕಾಲೇಜು, ಲಯನ್ಸ್ ಕ್ಲಬ್, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಐಸಿಟಿಸಿ ಕೇಂದ್ರ, ತಾಲ್ಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಏಡ್ಸ್ ನಿಯಂತ್ರಣ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಜಾಥಾದಲ್ಲಿ ಮಾತನಾಡಿದರು.
‘ಎಚ್ಐವಿಯಿಂದಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಪೀಡಿತರಿಗೆ ಚಿಕಿತ್ಸೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಹಣವ್ಯಯ ಮಾಡುತ್ತಿದೆ. ಎಲ್ಲರಂತೆ ಬಾಳಲು ಅವರಿಗೆ ಅವಕಾಶ ನೀಡಬೇಕು’ ಎಂದು ತಿಳಿಸಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯ ಐಸಿಟಿಸಿ ಕೇಂದ್ರದ ಮುಖ್ಯಸ್ಥ ಕೆಂಚೇಗೌಡ ಮಾತನಾಡಿ, ‘ಭಾರತದ ಒಟ್ಟು ಜನಸಂಖ್ಯೆಯಲ್ಲಿ 32 ಲಕ್ಷ ಮಂದಿ ಎಚ್ಐವಿಯಿಂದ ಬಳಲುತ್ತಿದ್ದಾರೆ. ಕರ್ನಾಟಕದಲ್ಲಿ 3.90 ಲಕ್ಷ ಮಂದಿ, ಹಾಸನ ಜಿಲ್ಲೆಯಲ್ಲಿ 12,700 ಜನತೆ, ಅದೇ ರೀತಿ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 2,188 ಮಂದಿ ಎಚ್ಐವಿ ಸೋಂಕಿತರಿದ್ದಾರೆ. ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಇವರ ಜೀವಿತಾವಧಿ ಹೆಚ್ಚಾಗಲಿದೆ’ ಎಂದು ಹೇಳಿದರು.
‘ದೇಹದ ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಅತಿಸಾರಭೇದಿ ಮತ್ತು ತೀವ್ರಜ್ವರಕಾಡುವುದು ಎಚ್ ಐವಿ ಲಕ್ಷಣ’ ಎಂದು ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎ.ಆರ್.ಅನಿತಾ ಮಾತನಾಡಿದರು. ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಿ. ಮಹೇಶ್, ದಂತವೈದ್ಯ ಡಾ.ಜಮೀರ್, ವೈದ್ಯನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಬಿ.ಎಲ್. ಅರುಣ್ ಕುಮಾರ್, ಲಯನ್ಸ್ ಕ್ಲಬ್ ಖಜಾಂಚಿ ಡಿ.ಕೆ. ಮಂಜುನಾಥ್, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ವೆಂಕಟೇಶ್ ಭಾಗವಹಿಸಿದ್ದರು.
ನಂತರ ವೈದ್ಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದಲ್ಲಿ ಜಾಥಾ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.