
ಹಾಸನ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಎನ್.ಡಿ.ಆರ್.ಕೆ. ಪ್ರಥಮ ದರ್ಜೆ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಹಾಗೂ ನೇತ್ರದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಉದ್ಘಾಟಿಸಿ ಮಾತನಾಡಿದ ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕ ಎಸ್.ಎಸ್ ಪಾಷಾ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಸಾಕಷ್ಟು ರಕ್ತದ ಕೊರತೆ ಇದೆ. ಈ ಬೇಡಿಕೆಯನ್ನು ಹೋಗಲಾಡಿಸಲು ಯುವಶಕ್ತಿಯು ರಕ್ತದಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ಕಾಯಿಲೆ ಹಾಗೂ ಇನ್ನಿತರ ಕಾಯಿಲೆಗಳನ್ನು ತಡೆಗಟ್ಟಬಹುದು. ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ತಿಳಿಸಿದರು.
ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶಬ್ಬೀರ್ ಅಹ್ಮದ್, ರೆಡ್ ಕ್ರಾಸ್ ಸಂಸ್ಥೆಯ ಇತಿಹಾಸ, ಮುಖ್ಯ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.
ನಿರ್ದೇಶಕ ಎಚ್.ಡಿ ಕುಮಾರ್, ರೆಡ್ ಕ್ರಾಸ್ ಸಂಸ್ಥೆ ಜಿಲ್ಲೆಯಲ್ಲಿ ಅನೇಕ ಮಾನವೀಯ ಮೌಲ್ಯಗಳ ಆಧಾರಿತ ಚಟುವಟಿಕೆ ಮಾಡುತ್ತಿದೆ. ಈ ಶಿಬಿರದಲ್ಲಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಕೀ ಚೈನ್ ಉಡುಗೊರೆಯಾಗಿ ನೀಡಲಾಗುವುದು ಎಂದು ತಿಳಿಸಿದರು.
ಡಾ.ರವಿಕಾಂತ್ ಅಧ್ಯಕ್ಷತೆ ವಹಿಸಿದ್ದರು. ಈ ಶಿಬಿರದಲ್ಲಿ ಒಟ್ಟು 30 ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಕ್ತದಾನ ಮಾಡಿದರು. ಡಾಕ್ಟರ್ ಅಗರವಾಲ್ ಕಣ್ಣಿನ ಆಸ್ಪತ್ರೆಯ ವತಿಯಿಂದ 100ಕ್ಕೂ ಹೆಚ್ಚಿನ ಜನ ವಿದ್ಯಾರ್ಥಿಗಳ ನೇತ್ರ ತಪಾಸಣೆ ಮಾಡಲಾಯಿತು.
ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಜಯೇಂದ್ರ ಕುಮಾರ್, ಗಿರೀಶ್, ಭೀಮರಾಜ್, ಸಂಯೋಜಕ ಅವಿನಾಶ್, ಶಿವೇಗೌಡ, ತಿಲಕ್ ಹಾಗೂ ಕಾರ್ಯಕ್ರಮ ಸಂಯೋಜಕ ಮಧು ಕೆ.ಆರ್. ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.