ADVERTISEMENT

ಅಂಗನವಾಡಿಗಳಿಗೆ ಕಟ್ಟಡ ಒದಗಿಸಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2011, 6:30 IST
Last Updated 5 ಫೆಬ್ರುವರಿ 2011, 6:30 IST

ಸವಣೂರ: ನಗರದ ವ್ಯಾಪ್ತಿಯಲ್ಲಿರುವ 30 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವನ್ನು ಹೊಂದಲು, ಪುರಸಭೆಯ ವತಿಯಿಂದ ಸೂಕ್ತ ನಿವೇಶನ ಸೌಲಭ್ಯವನ್ನು ಕಲ್ಪಿಸಬೇಕು ಎಂದು ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇದಿಕೆ ಆಗ್ರಹಿಸಿದೆ.

ಈ ಕುರಿತಂತೆ ಶುಕ್ರವಾರ ಪುರಸಭೆಯ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಗಿದ್ದು, ನಗರ ಪ್ರದೇಶದಲ್ಲಿರುವ 32 ಅಂಗನವಾಡಿ ಕೇಂದ್ರಗಳಲ್ಲಿ ಕೇವಲ 2 ಕೇಂದ್ರಗಳು ಮಾತ್ರ ಸ್ವಂತ ಕಟ್ಟಡ ಹೊಂದಿವೆ. ಉಳಿದ 30 ಕೇಂದ್ರಗಳಿಗೆ ನಿವೇಶನದ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

30 ಅಂಗನವಾಡಿ ಕೇಂದ್ರಗಳನ್ನು ಬಾಡಿಗೆ ಕಟ್ಟಡದಲ್ಲಿ ನಿರ್ವಹಿಸಲಾಗುತ್ತಿದೆ. ಆಯಾ ವಾರ್ಡ್‌ಗಳಲ್ಲಿ ಪುರಸಭೆಯ ನಿವೇಶನಗಳಿದ್ದು, ಅವುಗಳನ್ನು ಅಂಗನವಾಡಿ ಕೇಂದ್ರಗಳಿಗಾಗಿ ನೀಡಬೇಕು. ಈ ಕುರಿತಂತೆ ಹಲವು ಬಾರಿ ಪುರಸಭೆ ಹಾಗೂ ಸದಸ್ಯರಲ್ಲಿ ವಿನಂತಿಸಿಕೊಳ್ಳಲಾಗಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಸೂಕ್ತ ಕ್ರಮ ಜರುಗಿಸದಿದ್ದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಧರಣಿಯನ್ನು ಕೈಗೊಳ್ಳಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಮನವಿ ಸಲ್ಲಿಕೆಯ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

ಮೇವಿನ ಬಣವಿಗೆ ಬೆಂಕಿ: ಅಪಾರ ಹಾನಿ
ಬ್ಯಾಡಗಿ: ಆಕಸ್ಮಿಕ ಬೆಂಕಿ ತಗುಲಿ ರೂ. 3ಲಕ್ಷ ಮೌಲ್ಯದ ಮೇವಿನ ಬಣವಿಗಳು ಸುಟ್ಟು ಹೋದ ಘಟನೆ ತಾಲ್ಲೂಕಿನ ಹೆಡಿಗ್ಗೊಂದ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಶಿವನಗೌಡ ರುದ್ರಗೌಡ ತೋಟದ ಹಾಗೂ ಅವರ ಸಹೋದರರಾದ ಬಸನಗೌಡ, ರುದ್ರಗೌಡ ಎಂಬವರಿಗೆ ಸೇರಿದ ಮೇವಿನ ಬಣವಿಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹೆಚ್ಚು ಪ್ರಯಾಸ ಪಡಬೇಕಾಯಿತು. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.