ADVERTISEMENT

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 6:35 IST
Last Updated 21 ಮಾರ್ಚ್ 2012, 6:35 IST

ಹಾವೇರಿ: ಜಿಲ್ಲೆಯ ಜನರ ಆರೋಗ್ಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರ ಮೇಲೆ ನಡೆಯುವ ದೌರ್ಜನ್ಯ ಖಂಡಿಸಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಜಿಲ್ಲೆಯ ನೂರಾರು ಆಶಾ ಕಾರ್ಯಕರ್ತೆಯರು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ಪ್ರತಿಭಟನಾ ಧರಣಿ ಆರಂಭಿಸಿದರು.

ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದರು. ಹಲವು ದಿನಗಳಿಂದಲೂ ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಈ ಸಂದರ್ಭದಲ್ಲಿ ಆರೋಪಿಸಿದರು. ಆಶಾ ಕಾರ್ಯಯರ್ತೆಯರ ವಿರುದ್ಧ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ ಎಂದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಮುಖಂಡರಾದ ಪುಷ್ಪಾ ಮಡ್ಲೂರಮಠ ಮಾತನಾಡಿ, ಸವಣೂರು ತಾಲ್ಲೂಕಿನ ಹತ್ತಿಮತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೆಳಗೊಂಡ ಗ್ರಾಮದ ಕಾರ್ಯಕರ್ತೆ ಶಿವಕ್ಕ ಹರಿಜನ ಅವರ ಮೇಲೆ ಕಳಲಕೊಂಡ ಗ್ರಾಮದ ನೀಲವ್ವ ಹಾಗೂ ಕರಿಯಪ್ಪ ಅವರ ಮಗಳ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಸುಳ್ಳು ಆರೋಪ ಹೊರಿಸಿ ಮನೆಯ ಮುಂದಿನ ವಿದ್ಯುತ್ ಕಂಬದ ಬಳಿ ಕೂಡಿ ಹಾಕಿ ಹೊಡೆದು ಸೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿದರು.

ಗ್ರಾಮೀಣ ಭಾಗದ ಜನರ ಆರೋಗ್ಯ, ಗ್ರಾಮ ನೈರ್ಮಲ್ಯದ ಅರಿವಿಗಾಗಿ, ಶಿಶು, ತಾಯಿಯ ಮರಣದ ತಡೆಗೆ ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ಮೇಲೆ ಈ ರೀತಿ ದೌರ್ಜನ್ಯ ನಡೆಸಿರುವುದು ಅಮಾನವಿಯ ಕೃತ್ಯ ಎಂದ ಅವರು, ಶಿವಕ್ಕನ ಮೇಲೆ ದೌರ್ಜನ್ಯ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಇಂತಹ ಘಟನೆಗಳು ಮರುಕಳಿಸಿದರೆ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ರಾಜ್ಯವ್ಯಾಪಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ಚನ್ನಬಸಪ್ಪ ಅವರಿಗೆ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಿದರು.

ಆಶಾ ಕಾರ್ಯಕರ್ತೆಯರ ಸಂಘದ ಪ್ರಮುಖರಾದ ಜಯಶೀಲಾ ಬಂಕಾಪುರಮಠ, ಬಿ.ನಾಗಲಕ್ಷ್ಮಿ, ಲಕ್ಷ್ಮಿ ಕಬ್ಬೂರ, ರತ್ನಾ ಮಕರವಳ್ಳಿ ಅಲ್ಲದೇ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.