ADVERTISEMENT

ಎಚ್‌ಡಿಕೆಯಿಂದ ತಾಲ್ಲೂಕಿಗೆ ಹೆಚ್ಚಿನ ಅನುದಾನ

​ಪ್ರಜಾವಾಣಿ ವಾರ್ತೆ
Published 3 ಜುಲೈ 2012, 8:10 IST
Last Updated 3 ಜುಲೈ 2012, 8:10 IST

ಹಿರೇಕೆರೂರ: ಎಚ್.ಡಿ.ಕುಮಾರ ಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗೆ ರೂ.19 ಕೋಟಿ ಸೇರಿದಂತೆ ತಾಲ್ಲೂಕಿಗೆ ರೂ.350 ಕೋಟಿ ಅನುದಾನ ನೀಡಿದ್ದರಿಂದ ತಾಲ್ಲೂಕು ಪ್ರಗತಿ ಕಂಡಿದೆ ಎಂದು ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಹೇಳಿದರು.

ಪಟ್ಟಣದ ಗುರು ಭವನದಲ್ಲಿ ಶನಿವಾರ ಸಂಜೆ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಪರ್ಯಾಯ ಶಕ್ತಿಯಾಗಿದೆ ಎಂದರು.

ಮಾಜಿ ಮುಖ್ಯ ಸಚೇತಕ ಡಿ.ಎಂ. ಸಾಲಿ ಮಾತನಾಡಿ, ರಾಜ್ಯದಲ್ಲಿ ವರ್ಗ ಸಂಘರ್ಷಕ್ಕೆ ನಾಂದಿ ಆಗುವಂಥ ಸ್ಥಿತಿ ನಿರ್ಮಾಣವಾಗುತ್ತಿದ್ದು, ಸಾಮಾಜಿಕ ಸ್ವಾಸ್ಥ್ಯ ಕೆಡುತ್ತಿದೆ. ಮಠಾಧೀಶ ರಲ್ಲಿಯೂ 2 ಗುಂಪುಗಳಾಗಿ ಭ್ರಷ್ಟರನ್ನು ಬೆಂಬಲಿಸುವ ಮಠಾಧೀಶರೂ ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಮುಖಂಡ ರಿಯಾಜ್ ಅಹ್ಮದ್ ಫಾರೂಕಿ, ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎಂದು ಕಾಂಗ್ರೆಸ್ ಪಕ್ಷವೇ ಪ್ರಚಾರ ನಡೆಸುತ್ತಾ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಯತ್ನಿಸುತ್ತಿದೆ. ಈ ತಂತ್ರಕ್ಕೆ ದೇಶದ ಮುಸ್ಲಿಮರು ಬಲಿಯಾಗಬಾರದು. ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ದೇಶದ ಪ್ರಧಾನಿ ಆಗಲು ಸಾಧ್ಯವಿಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ, ಬಸವರಾಜ ಹೊರಟ್ಟಿ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವಗೌಡ ಗಾಜಿಗೌಡ್ರ, ಎಚ್.ಎಸ್.ಕೋಣನವರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.