ಹಾವೇರಿ: ಜಮೀನು ನೀಡಿದ ಸ್ವಾತಂತ್ರ್ಯ ಹೋರಾಟಗಾರ್ತಿಗೆ ಪರಿಹಾರ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಕಚೇರಿಯನ್ನು ಜಿಲ್ಲಾ ಹೆಚ್ಚುವರಿ ದಿವಾಣಿ ನ್ಯಾಯಾಲಯದ ನ್ಯಾಯಾಧೀಶರ ಆದೇಶದಂತೆ ಜಪ್ತಿ ಮಾಡಿದ ಘಟನೆ ಮಂಗಳವಾರ ನಡೆದಿದೆ.
ನಗರದ ಸ್ವಾತಂತ್ರ್ಯ ಹೋರಾಟಗಾರ್ತಿ 92 ವರ್ಷದ ಗಿರಿಜವ್ವ ಕರಿಯಪ್ಪ ಹೊಸಮನಿ ಎಂಬುವವರಿಗೆ ಸೇರಿದ ಏಳುಗುಂಟೆ ಜಾಗೆಯನ್ನು ರಸ್ತೆಗಾಗಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದರೆ, ಸಂತ್ರಸ್ತೆಗೆ ಪರಿಹಾರ ನೀಡಿರಲಿಲ್ಲ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ಮಾಡಿದ್ದರೂ, ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದರಿಂದ ನ್ಯಾಯಾಲಯದ ಆದೇಶದಂತೆ ಕಚೇರಿಯಲ್ಲಿದ್ದ ಉಪವಿಭಾಗಾಧಿಕಾರಿಗಳ ಕುರ್ಚಿ, ಸೇರಿದಂತೆ ಸಿಬ್ಬಂದಿ ಕುರ್ಚಿ, ಟೇಬಲ್, ಕಂಪ್ಯೂಟರ್, ಪ್ರಿಂಟರ್. ಸ್ಕಾನರ್ ಸೇರಿದಂತೆ ಕಚೇರಿಯಲ್ಲಿದ್ದ ಎಲ್ಲ ವಸ್ತುಗಳನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ಕಚೇರಿಯಲ್ಲಿನ ಎಲ್ಲ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದರಿಂದ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಸೇರಿದಂತೆ ಕಚೇರಿ ಸಿಬ್ಬಂದಿ ಕುಳಿತುಕೊಳ್ಳಲು, ಕಾರ್ಯ ನಿರ್ವಹಿಸಲು ಕುರ್ಚಿಗಳಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಕರಣದ ಹಿನ್ನೆಲೆ: ಹಾವೇರಿಯ ಹೊಸಮನಿ ಸಿದ್ದಪ್ಪ ಅವರ ಮೊಮ್ಮಗಳಾದ ಗಿರಿಜವ್ವ ಹೊಸಮನಿ ಅವರ ಏಳು ಗುಂಟೆ ಜಾಗೆಯನ್ನು 1967 ರಲ್ಲಿ ಹಾವೇರಿ ಎಪಿಎಂಸಿ–ಗಣಜೂರು ರಸ್ತೆ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಭೂಸ್ವಾಧೀನ ಸಂದರ್ಭದಲ್ಲಿ ಪರಿಹಾರ ನೀಡುವುದಾಗಿ ಹೇಳಿದ್ದರೂ, ಪರಿಹಾರ ಮಾತ್ರ ನೀಡದೇ ನಿರ್ಲಕ್ಷ್ಯ ವಹಿಸಿತ್ತು. ಆಗ ಗಿರಿಜವ್ವ ಪರಿಹಾರಕ್ಕೆ ಒತ್ತಾಯಿಸಿ ನ್ಯಾಯಾಲಯದ ಮೆಟ್ಟಿಲು ಏರಿದ್ದರು.
ಪ್ರಕರಣದ ವಿಚಾರಣೆ ನಡೆಸಿ ಜಿಲ್ಲಾ ಹೆಚ್ಚುವರಿ ದಿವಾಣಿ ನ್ಯಾಯಾಲಯದ ನ್ಯಾಯಾಧೀಶರು 2010 ರಲ್ಲಿ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದರು. ನ್ಯಾಯಾಲಯದ ಆದೇಶದ ನಂತರವೂ ಉಪವಿಭಾಗಾಧಿಕಾರಿ ಕಚೇರಿಯಿಂದ ಗಿರಿಜವ್ವಳಿಗೆ ಪರಿಹಾರ ಮಾತ್ರ ಸಿಗಲಿಲ್ಲ. ಇದಕ್ಕೆ ಬೇಸತ್ತು ತನಗೆ ಪರಿಹಾರ ಕೊಡಿಸಬೇಕು ಎಂದು ನ್ಯಾಯಾಲಯಕ್ಕೆ ಮರು ಅರ್ಜಿ ಸಲ್ಲಿಸಿದರು.
ಗಿರಿಜವ್ವಳ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, 2012 ರಲ್ಲಿ ಕೂಡಲೇ ಪರಿಹಾರ ನೀಡಬೇಕು ಇಲ್ಲವಾದರೆ, ಕಚೇರಿ ಜಪ್ತಿ ಮಾಡಿಸಲಾಗುವುದು ಎಂದು ಎಚ್ಚರಿಕೆ ಆದೇಶ ನೀಡಿತು. ಆಗಲೂ ಆದೇಶಕ್ಕೆ ಯಾವುದೇ ಮಾನ್ಯತೆ ನೀಡದೇ ಉಪವಿಭಾಗಾಧಿಕಾರಿ ನಿಷ್ಕಾಳಜಿ ತೋರಿಸಿತ್ತು. ಇದರಿಂದ ಆಕ್ರೋಶಗೊಂಡ ನ್ಯಾಯಾಲಯ 2013, ಜುಲೈ 27 ರಂದು ಪರಿಹಾರದ ಹಣ, ಬಡ್ಡಿ ಸೇರಿ ಒಟ್ಟು 39,29,727 ರೂಪಾಯಿ ತಕ್ಷಣವೇ ನೀಡಬೇಕು ಎಂದು ಸೂಚಿಸಿತು.
ಉಪವಿಭಾಗಾಧಿಕಾರಿಗಳು ಒಂದು ತಿಂಗಳೊಳಗಾಗಿ ಸಂತ್ರಸ್ತೆಗೆ ಹಣ ಸಂದಾಯ ಮಾಡುವುದಾಗಿ ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ನೀಡಿದ್ದರು. ಒಂದು ತಿಂಗಳು ಮುಗಿದ ಮೇಲೆಯೂ ಹಣ ನೀಡದೇ ಇದ್ದಾಗ, ನ್ಯಾಯಾಲಯದ ಆದೇಶದಂತೆ ಕಚೇರಿಯನ್ನು ಜಪ್ತಿ ಮಾಡಲಾಯಿತು.
ಸ್ವಾತಂತ್ರ್ಯ ಹೋರಾಟಗಾರ್ತಿ ಗಿರಿಜವ್ವ ಹೊಸಮನಿ ಪರ ವಕೀಲ ಅಶೋಕ ನೀರಲಗಿ ವಕಾಲತ್ತು ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.