ADVERTISEMENT

ಎಸ್‌ಎಫ್‌ಐ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2013, 9:40 IST
Last Updated 2 ಆಗಸ್ಟ್ 2013, 9:40 IST

ಹಾವೇರಿ: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿ ಅಳವಡಿಸಬೇಕೆಂಬ ಬೇಡಿಕೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕೊಳ್ಳಿ ಪಾಲಿಟೆಕ್ನಿಕ ಕಾಲೇಜಿನಿಂದ ಪ್ರತಿಭಟನೆ ಆರಂಭಿಸಿದ ಎಸ್‌ಎಫ್‌ಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ-4ರ ಗುಂಟ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಶಿಕ್ಷಣ ವಿರೋಧ ನೀತಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿದರು. ನಂತರ ಕೆಲ ಕಾಲ ರಸ್ತೆತಡೆ ನಡೆಸಿ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಬಸವರಾಜ ಪೂಜಾರ ಮಾತನಾಡಿ, ತಾಂತ್ರಿಕ ಶಿಕ್ಷಣ ಮಂಡಳಿಯ ಕೆಲವು ಅವೈಜ್ಞಾನಿಕ ನೀತಿಗಳಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪ್ರಕ್ರಿಯೆಗೆ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ (ಡಿ.ಟಿ.ಇ) ಮತು ಸರ್ಕಾರಗಳೇ ನೇರ ಹೊಣೆಯಾಗಿವೆ ಎಂದು ಆರೋಪಿಸಿದರು.

ಮೂರು ವರ್ಷದ ಡಿಪ್ಲೊಮಾ ಕೋರ್ಸ್‌ನ್ನು ಪದವಿ ರೀತಿಯಲ್ಲಿ ಸಂಪೂರ್ಣವಾಗಿ ಮೂರು ವರ್ಷ ಮುಂದಿನ ತರಗತಿಗಳಿಗೆ ಹಾಜರಾಗಲು, ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಅವೈಜ್ಞಾನಿಕ ಹಾಗೂ ಕಠಿಣವಾದ ಹೊಸ ಪಠ್ಯಕ್ರಮವನ್ನು ಸರಳೀಕರಿಸಬೇಕು. ಒಂದು ಸೆಮಿಸ್ಟರ್‌ನಲ್ಲಿ ಕನಿಷ್ಠ 4 ತಿಂಗಳು ಕಡ್ಡಾಯವಾಗಿ ತರಗತಿಗಳು ನಡೆಯುವಂತೆ ಕ್ರಮವಹಿಸಬೇಕು. ಪ್ರವೇಶ ಪ್ರಕ್ರಿಯೆ ಸಂದರ್ಭದಲ್ಲಿ ಸೀಟು ಹಂಚಿಕೆಯಲ್ಲಿ ನಡೆಯುವ ಭ್ರಷ್ಟಾಚಾರವನ್ನು ತಡೆಗಟ್ಟಬೇಕು ಎಂದು ಪೂಜಾರ ಒತ್ತಾಯಿಸಿದರು.

ಎಸ್‌ಎಫ್‌ಐ ಕಾರ್ಯಕರ್ತರು ನಂತರ ತಹಶೀಲ್ದಾರ್ ಮೂಲಕ ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸದರು.

ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರೇಣುಕಾ ಕಹಾರ, ಜಿಲ್ಲಾ ಮುಖಂಡರಾದ ಭರತರೆಡ್ಡಿ, ನೀಲಮ್ಮ ಶಂಕ್ರಪ್ಪನವರ, ಪೂಜಾ, ಪ್ರಸನ್ನಕುಮಾರ, ಮಲ್ಲಿಕಾರ್ಜುನ ಹಿರೇಮಠ, ಶೀತಲ ಹನಮನಹಳ್ಳಿ, ಆನಂದ, ಅಕ್ಷಯಕುಮಾರ, ಮಾಲತೇಶ ಗಿರಿಯಪ್ಪನವರ, ಶ್ರೀಧರ ಹರವಿ, ಹಾಲೇಶ, ಪ್ರಶಾಂತ, ವಿನಯ, ಸಿದ್ದು, ಅರುಣ, ಕಾರ್ತಿಕ, ನವೀನ ಶಿಜವಾಡ್ಕರ, ವಿಕಾಸ್, ರುದ್ರೇಶ. ಸಚಿನ್. ಬಿ.ಬಿ., ನಾಗರಾಜ ಗಾಣಿಗೇರ, ಚಂದ್ರು ಶಂಕ್ರಪ್ಪನವರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.