ADVERTISEMENT

ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಸಂಪುಟದಿಂದ ಡಿಕೆಶಿ ಮತ್ತು ಬೇಗ್‌ ಕೈಬಿಡಲು ಬಿಜೆಪಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಜನವರಿ 2014, 6:54 IST
Last Updated 7 ಜನವರಿ 2014, 6:54 IST

ಹಾವೇರಿ: ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ.ಶಿವಕುಮಾರ ಹಾಗೂ ರೋಷನ್‌ಬೇಗ್‌ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪುಪಟ್ಟಿ ಕಟ್ಟಿಕೊಂಡು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಿದ್ದಪ್ಪ ವೃತ್ತಕ್ಕೆ ಬಂದು ಕೆಲಕಾಲ ಹೆದ್ದಾರಿ ತಡೆ ನಡೆಸಿ ದರಲ್ಲಿದೇ, ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು.

ನೇತೃತ್ವ ವಹಿಸಿದ್ದ ವಿಧಾನ ಪರಿಷತ್‌ ಸದಸ್ಯ ಸೋಮಣ್ಣ ಬೇವಿನಮರದ ಮಾತನಾಡಿ, ತನ್ನದು ಪರಿಶುದ್ಧ ಮಂತ್ರಿಮಂಡಲ. ಇಲ್ಲಿ ಕಳಂಕಿತರಿಗೆ ಸ್ಥಾನವಿಲ್ಲ ಎಂದು ಬೀಗುತ್ತಿದ್ದ ಸಿಎಂ ಸಿದ್ದರಾಮಯ್ಯ ಇದೀಗ, ಭ್ರಷ್ಟರಾದ ಡಿ.ಕೆ.ಶಿವಕುಮಾರ ಮತ್ತು ರೋಷನ್‌ಬೇಗ್‌ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಜನತೆಗೆ ಕೊಟ್ಟ ಮಾತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿವರೆಗೆ ಪಾದಯಾತ್ರೆ  ಮಾಡಿದ್ದ ಮುಖ್ಯಮಂತ್ರಿ ಇದೀಗ ಅಕ್ರಮ ಗಣಿಗಾರಿಕೆಗಿಂತಲೂ  ಮಿಗಿಲಾದ ಆರೋಪ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್‌ ಮತ್ತು ಬೇಗ್‌ ಅವರನ್ನು ಯಾವು ನೈತಿಕತೆಯ ಮೇಲೆ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ ? ಎನ್ನುವ ಬಗ್ಗೆ ರಾಜ್ಯದ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಭೋಜರಾಜ ಕರೂದಿ ಮಾತನಾಡಿ, ಮಾತು, ಕೃತಿಗಳಿಗೆ ವಿಭಿನ್ನವಾಗಿ ನಡೆದುಕೊಳ್ಳುವ ಕಾಂಗ್ರೆಸ್‌ ಸಂಸ್ಕೃತಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಕರಗತವಾಗಿದೆ. ಈ ಕಾರಣಕ್ಕಾಗಿಯೇ ಕಳಂಕಿತರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಗೇಲಿ ಮಾಡಿದರು.

ಇದೇ ಸಂದರ್ಭದಲ್ಲಿ ಕೂಡಲೇ ಭ್ರಷ್ಟರನ್ನು ತಮ್ಮ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಮಾಜಿ ಶಾಸಕ ವಿ.ಎಸ್‌.ಪಾಟೀಲ, ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಮಲ್ಲೇಶಪ್ಪ ಹರಿಜನ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಾರತಿ ಜಂಬಗಿ,ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ, ನಾಗೇಂದ್ರ ಕಟಕೋಳ, ಯುವ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಮುಳ್ಳೂರ, ಮಹಿಳಾ ಶಹರ ಘಟಕದ ಅಧ್ಯಕ್ಷೆ ಜ್ಯೋತಿ ಸಾತೇನಹಳ್ಳಿ,

ಶಿಗ್ಗಾವಿ–ಸವಣೂರ ತಾಲ್ಲೂಕು ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಹಾನಗಲ್‌ ತಾಲ್ಲೂಕು ಅಧ್ಯಕ್ಷ ವೀರಪ್ಪ ನಿಂಬಣ್ಣನವರ, ಹಿರೇಕೆರೂರ ತಾಲ್ಲೂಕು ಘಟಕದ ಅಧ್ಯಕ್ಷ ಎಸ್‌.ಆರ್‌.ಅಂಗಡಿ, ರಾಣೆಬೆನ್ನೂರ ತಾಲ್ಲೂಕು ಘಟಕದ ಅಧ್ಯಕ್ಷ ವೀರಣ್ಣ ಅಂಗಡಿ, ವಿರೂಪಾಕ್ಷಪ್ಪ ಬಳ್ಳಾರಿ, ಮೈಲಾರಪ್ಪ ಗುಡಗೂರ, ಮಂಜುನಾಥ ಓಲೇಕಾರ, ವಿಶ್ವನಾಥ ಪಾಟೀಲ, ವೀರೇಶ ಜಾಲವಾಡಗಿ,  ನಿಂಗಪ್ಪ ಜವಳಿ, ಶಂಭಣ್ಣ ಗುಂಜಳ, ಎ.ಜಿ.ಕಿಲ್ಲೇದಾರ, ಈರಣ್ಣ ಕಾರಡಗಿ, ಮಂಜುಳಾ ಕರಬಸಮ್ಮನವರ, ಲಲಿತಾ ಗುಂಡೆನಹಳ್ಳಿ, ರೇಣುಕಾ ಪೂಜಾರ, ಮಹಾಂತಯ್ಯ ಹಿರೇಮಠ, ರಮೇಶ ಪಾಲನಕರ, ಸಿದ್ದಪ್ಪ ಬಂಕಾಪುರ, ಹಜರತ್‌ ಖಾನ್‌  ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.