ADVERTISEMENT

ಜಾಹೀರಾತು ಪ್ರಕಟಣೆಗೆ ಅನುಮತಿ ಕಡ್ಡಾಯ

ಮಾಧ್ಯಮ ಪ್ರಮಾಣೀಕರಣ ಸಮಿತಿ ಅಧ್ಯಕ್ಷೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಾಂತಾ ಹುಲ್ಮನಿ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಮೇ 2018, 12:16 IST
Last Updated 5 ಮೇ 2018, 12:16 IST

ಹಾವೇರಿ: ‘ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣಕ್ಕೆ ವಿದ್ಯುನ್ಮಾನ ಮಾಧ್ಯಮ, ಕೇಬಲ್ ವಾಹಿನಿ, ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳಿಗೆ, ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು’ ಎಂದು ಮಾಧ್ಯಮ ಪ್ರಮಾಣೀಕರಣ ಸಮಿತಿ ಅಧ್ಯಕ್ಷೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಾಂತಾ ಹುಲ್ಮನಿ ಹೇಳಿದರು.

ಶುಕ್ರವಾರ ಇಲ್ಲಿ ಆಯೋಜಿಸಿದ್ದ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಸಿಗಾಗಿ ಸುದ್ದಿ ಪ್ರಕಟಣೆ ಮೇಲೆ ಸಮಿತಿಯು ತೀವ್ರ ನಿಗಾ ವಹಿಸಿದೆ. ಒಂದು ವೇಳೆ ನಿಯಮಾವಳಿಗಳನ್ನು ಮೀರಿ ಜಾಹೀರಾತುಗಳನ್ನು ಪ್ರಕಟಿಸಿದರೆ ಅದನ್ನು ಅಭ್ಯರ್ಥಿಗಳ ವೆಚ್ಚಕ್ಕೆ ಸೇರಿಸಲಾಗುವುದು. ಅಲ್ಲದೇ, ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

‘ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನದ 48 ಗಂಟೆಗಳ ಮುಂಚಿತವಾಗಿ ಪ್ರಸಾರವಾಗುವ ಎಲ್ಲ ಜಾಹೀರಾತುಗಳಿಗೂ ಪೂರ್ವಾನುಮತಿ ಅವಶ್ಯ. ಜಿಲ್ಲೆಯಲ್ಲಿ ಪ್ರಸಾರವಾಗುವ ಎಲ್ಲ ಮಾಧ್ಯಮಗಳ ಸುದ್ದಿಗಳನ್ನು ನಿರಂತರವಾಗಿ ವೀಕ್ಷಿಸಿ, ದಾಖಲು ಮಾಡಲಾಗುತ್ತಿದೆ. ಅಲ್ಲದೇ, ಪತ್ರಿಕೆಯಲ್ಲಿ ಪ್ರಕಟವಾಗುವ ಸುದ್ದಿ, ಜಾಹೀರಾ
ತುಗಳನ್ನು ಸಮಿತಿ ಸದಸ್ಯರು ಪರಿಶೀಲಿಸುತ್ತಿದ್ದಾರೆ. ಒಂದು ವೇಳೆ ಕಾಸಿಗಾಗಿ ಸುದ್ದಿ ಪ್ರಕಟಗೊಂಡಲ್ಲಿ ಸಮಿತಿ ಸ್ವಯಂ ದೂರು ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಚುನಾವಣಾಧಿಕಾರಿಗಳಿಗೆ ಶಿಫಾರಸು ಮಾಡಲಿದೆ’ ಎಂದರು.

ಸಮಿತಿ ಸದಸ್ಯ ಸತೀಶ ಕುಲಕರ್ಣಿ, ಗಂಗಾಧರ ಹೂಗಾರ, ಪ್ರಕಾಶ ಜೋಷಿ, ಅರುಣಕುಮಾರ, ಎಂ.ಸಿ.ಎಂ.ಸಿ. ನೋಡಲ್ ಅಧಿಕಾರಿ ಶರಣಪ್ಪ ಭೋಗಿ, ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ್, ದುಂಡೇರ ಇದ್ದರು.3

ಮತದಾನ ಜಾಗೃತಿ ಕಾರ್ಯಕ್ರಮ 7ಕ್ಕೆ

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮೇ 7ರಂದು ಬೆಳಿಗ್ಗೆ 10.30ಕ್ಕೆ ನಗರದ ಡಿ.ದೇವರಾಜ ಅರಸು ಭವನದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

**
ಫೇಸ್‌ಬುಕ್, ಟ್ವಿಟ್ಟರ್‌, ವಾಟ್ಸ್‌ಆ್ಯಪ್‌, ಬ್ಲಾಗರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲು ಪ್ರತ್ಯೇಕ ತಂಡವನ್ನು ನಿಯೋಜಿಸಲಾಗಿದೆ
– ಶಾಂತಾ ಹುಲ್ಮನಿ, ಹೆಚ್ಚುವರಿ ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.