ADVERTISEMENT

ಪ್ರಾದೇಶಿಕ ಪಕ್ಷಗಳಿಗೆ ಅಪಾರ ಜನಮಾನ್ಯತೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2017, 8:53 IST
Last Updated 25 ಡಿಸೆಂಬರ್ 2017, 8:53 IST

ಶಿಗ್ಗಾವಿ: ‘ಅಧಿಕಾರಕ್ಕಾಗಿ ಕಚ್ಚಾಟ, ಆರೋಪ, ಪ್ರತ್ಯಾರೋಪದಲ್ಲಿ ಕಾಲಹರಣ ಮಾಡುತ್ತಿರುವ ಕಾಂಗ್ರೆಸ್‌, ಬಿಜೆಪಿಯಿಂದ ಜನ ಬೇಸತ್ತಿದ್ದಾರೆ. ಹೀಗಾಗಿ ಜೆಡಿಎಸ್‌ ಪಕ್ಷದಂತ ಪ್ರಾದೇಶಿಕ ಪಕ್ಷಗಳಿಗೆ ಅಪಾರ ಜನಮಾನ್ಯತೆ ಸಿಗುತ್ತಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಪಟ್ಟಣದಲ್ಲಿ ಶನಿವಾರ ಜೆಡಿಎಸ್‌ ಪಕ್ಷದ ಕಾರ್ಯಾಲಯ ಉದ್ಘಾಟನೆ ಹಾಗೂ ಮನೆ, ಮನೆಗೆ ಕುಮಾರಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಬಡ ಕೂಲಿಕಾರರು ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ನಿರುದ್ಯೋಗಿ ಯುವಕರು ಉದ್ಯೋಗಕ್ಕಾಗಿ ಅಲೆಯುತ್ತಿದ್ದಾರೆ. ವೃದ್ದರು ಆರೋಗ್ಯಕ್ಕಾಗಿ ಚಿಂತಿಸುತ್ತಿದ್ದಾರೆ. ಸರ್ಕಾರ ಈ ಕುರಿತು ಯಾವುದೇ ಯೋಜನೆಗಳನ್ನು ಜಾರಿಗೆ ತರದೇ ನಿತ್ಯ ಅವರ ಹಗರಣಗಳನ್ನು ಇವರು ಹೇಳುವುದು, ಇವರ ಹಗರಣಗಳನ್ನು ಅವರು ಹೇಳುವುದು. ಹೀಗಾಗಿ ಹಗರಣಗಳ ಸರಮಾಲೆಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿ ಮರೆಯಾಗಿದೆ’ ಎಂದರು.

ಜೆಡಿಎಸ್‌ ಅಧಿಕಾರ ಅವದಿಯಲ್ಲಿ ಸಾಕಷ್ಟು ಶಿಕ್ಷಣ ಸಂಸ್ಥೆಗಳಿಗೆ ಅನುದಾನ, ರೈತರಿಗೆ ಸಾಲ ಮನ್ನಾ, ಅಂಗವಿಕಲ, ವಿಧವಾ ವೇತನ, ವೃದ್ಯಾಪ್ಯ ವೇತನ, ಮಕ್ಕಳಿಗೆ ಉಚಿತ ಸೈಕಲ್‌ ವಿತರಿಸುವದಲ್ಲದೆ ಗ್ರಾಮ ವಾಸ್ತವ್ಯಮಾಡುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ನೀಡಿದೆ’ ಎಂದರು.

ADVERTISEMENT

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಬೇವಿನಮರ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಧಾನ ಘಟಕದ ಕಾರ್ಯದರ್ಶಿ ಡಾ.ಸಂಜಯ ಡಾಂಗೆ, ರಾಜ್ಯ ಘಟಕದ ಉಪಾಧ್ಯಕ್ಷ ಶಿದ್ದಪ್ಪ ಯಾದವ, ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಶಿವಕುಮಾರ ಮಠದ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಖತಾಲಸಾಬ್ ಬಣಗಾರ, ಜಿಲ್ಲಾ ಎಸ್‌ಟಿ ಘಟಕದ ಅಧ್ಯಕ್ಷ ಈಶ್ವರ ತಾರೀಹಾಳ, ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ನವಲಗುಂದ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗಿಂತಾ ಸಿಂಗ್‌, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ಇಂದ್ರೇಕರ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.