ADVERTISEMENT

ಶಿಕ್ಷಕರ ವರ್ಗಾವಣೆಗಾಗಿ ಶಾಲೆಗೆ ಬೀಗ

​ಪ್ರಜಾವಾಣಿ ವಾರ್ತೆ
Published 21 ಜುಲೈ 2012, 6:20 IST
Last Updated 21 ಜುಲೈ 2012, 6:20 IST

ಹಾವೇರಿ: ಶಾಲೆಯಲ್ಲಿ ನಿರಂತರವಾಗಿ ಜಗಳವಾಡುವ ಶಿಕ್ಷಕರ ವರ್ಗಾವಣೆಗೆ ಒತ್ತಾಯಿಸಿ ಪಾಲಕರು ಹಾಗೂ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ತಾಲ್ಲೂಕಿನ ಕನಕಾಪುರದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಉಚ್ಚಂಗಮ್ಮ ಭೈರಮ್ಮನವರ ಹಾಗೂ ಉಳಿದ ಏಳು ಶಿಕ್ಷಕರಿಗೆ ಹೊಂದಾಣಿಕೆ ಇರಲಿಲ್ಲ. ಇದರಿಂದ ಪಾಠಕ್ಕಿಂತಲೂ ಹೆಚ್ಚಿಗೆ ಶಿಕ್ಷಕರ ನಡುವೆ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಶಿಕ್ಷಕರ ಸಾಮೂಹಿಕ ವರ್ಗಾವಣೆ ಮಾಡುವಂತೆ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದರು. ಆದರೆ, ವರ್ಗಾವಣೆಯಾಗದೇ ಶಿಕ್ಷಕರ ನಡುವಿನ ತಿಕ್ಕಾಟ ಮುಂದುವರಿದಿದ್ದರಿಂದ ಶುಕ್ರವಾರ ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದ ಶಾಲೆಯ ಎಲ್ಲ ಶಿಕ್ಷಕರನ್ನು ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದು ಧರಣಿ ನಡೆಸಿದರು.
ಈ ಸುದ್ದಿ ತಿಳಿಯುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಾಮಶೆಟ್ಟಿ ಶಾಲೆಗೆ ತೆರಳಿ ಗ್ರಾಮಸ್ಥರನ್ನು ಶಿಕ್ಷಕರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಆದರೆ, ಪ್ರಯೋಜನವಾಗಲಿಲ್ಲ. ಕೊನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಾಮಶೆಟ್ಟಿ ಅವರು ಮುಖ್ಯಾಧ್ಯಾಪಕಿ ಬೈರಮ್ಮನವರ ಅವರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿ ಆದೇಶ ಹೊರಡಿಸಿದ ನಂತರವಷ್ಟೆ, ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದೆ ಸರಿದು ಶಾಲೆಗೆ ಜಡಿದಿದ್ದ ಬೀಗ ತೆರೆದು ಪಾಠ ಮಾಡಲು ಅವಕಾಶ ಕಲ್ಪಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.