ADVERTISEMENT

ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2013, 6:19 IST
Last Updated 19 ಡಿಸೆಂಬರ್ 2013, 6:19 IST

ಹಿರೇಕೆರೂರ: ಮೆಡಿಕಲ್ ಹಾಗೂ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಶುಲ್ಕವನ್ನು ಹೆಚ್ಚಿಸುವ ಮೂಲಕ ಖಾಸಗಿ ಕಾಲೇಜುಗಳಿಗೆ ಅನುಕೂಲ ಮಾಡಿಕೊಡಲು ಹೊರಟಿರುವ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಮೆಡಿಕಲ್ ಹಾಗೂ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಶುಲ್ಕವನ್ನು ಹೆಚ್ಚಿಸಿ, ಖಾಸಗಿ ಕಾಲೇಜುಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ಪ್ರವೇಶ ಪ್ರಕ್ರಿಯೆ ಕೈಬಿಡಲು ರಾಜ್ಯ ಸರ್ಕಾರ ಮುಂದಾಗುತ್ತಿರುವುದು ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ.

ವಿದ್ಯಾರ್ಥಿಗಳು ಶುಲ್ಕವನ್ನು ಭರಿಸಲು ಆಗದಂತಹ ಸ್ಥಿತಿ ಎದುರಾಗಿ ಮುಂದೆ ಓದು ನಿಲ್ಲಿಸಬೇಕಾಗುತ್ತದೆ. ಕಾರಣ ಸರ್ಕಾರ ವೃತ್ತಿ ಶಿಕ್ಷಣ ಕೋರ್ಸ್ ಗಳನ್ನು ಮಾರಾಟದ ಸರಕನ್ನಾಗಿ ಪರಿಗಣಿಸದೇ, ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿಯದೇ ವಿದ್ಯಾರ್ಥಿಗಳ ಹಿತವನ್ನು ಕಾಪಾಡಬೇಕು ಎಂದು ಎಬಿವಿಪಿ ಕಾರ್ಯಕರ್ತರು ಒತ್ತಾಯಿಸಿದರು.

ಎಬಿವಿಪಿ ನಗರ ಕಾರ್ಯದರ್ಶಿ ನಂದನ ಹಲವಾಗಿಲ, ಹೋರಾಟ ಪ್ರಮುಖ ವಿಜಯ ತಿಪ್ಪಶೆಟ್ಟಿ, ನೂತನ ಚಕ್ರಸಾಲಿ, ವೆಂಕಟೇಶ ಡಾಂಗೆ, ದೇವರಾಜ ಹಂಚಿನಮನಿ, ಕೊಟ್ರೇಶ ಮಳಗಿ, ಕಿರಣ ಆರ್.ಬಿ., ರಾಜೇಶ ನಿಕ್ಕಂ, ರಾಜೇಶ ಪಾಟೀಲ, ವಿಜಯ ಹನಗೋಡಿಮಠ, ಜ್ಯೋತಿ ಡಿ.ಎನ್., ಪವಿತ್ರಾ ಎಂ.ಎ., ಪೂಜಾ ಎನ್.ಎಸ್. ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಎಬಿವಿಪಿ ಪ್ರತಿಭಟನೆ
ಹಿರೇಕೆರೂರ:
ಮೆಡಿಕಲ್ ಹಾಗೂ ಎಂಜಿನಿಯ ರಿಂಗ್ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಿಸುವ ಕ್ರಮವನ್ನು ಕೈಬಿಡಬೇಕು ಹಾಗೂ ಖಾಸಗಿ ಕಾಲೇಜುಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ಪ್ರವೇಶ ಪ್ರಕ್ರಿಯೆ ಸ್ಥಗಿತಗೊಳಿಸಲು ಮುಂದಾಗುತ್ತಿರುವ ನಿರ್ಧಾರವನ್ನು ಕೈಬಿಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಕಾರ್ಯಕರ್ತರು ಬುಧವಾರ ಹಂಸಭಾವಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಉಪ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಎಬಿವಿಪಿ ಮುಖಂಡರಾದ ದೇವರಾಜ ಹಂಚಿನಮನಿ, ರವಿ ಭೋಗಾವಿ, ಸಂತೋಷ  ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.