ಹಾವೇರಿ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯ ಇದ್ದರೂ ಸಂಬಂಧಿಸಿದ ನಗರಸಭೆ ಹಾಗೂ ಜಿಲ್ಲಾ ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರಕ್ಕೆ ಬಂದಿದ್ದ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ವಿ. ಕೃಷ್ಣರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ನೀರಿನ ಸಮಸ್ಯೆ ಉಂಟಾಗಿ ಜನತೆ ನೀರಿಗೆ ಹಾಹಾಕಾರ ಎದ್ದಿದೆ. ಬಿಜೆಪಿ ಏ. 24 ರಂದು ಸಮಸ್ಯೆ ನಿವಾರಿಸಲು ಒತ್ತಾಯಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಅಲ್ಲದೇ, 29ರಂದು ನಗರಸಭೆ ಎದುರು ಪ್ರತಿಭಟನೆ ನಡೆಸಿದೆ. ಮೇ 3ರಂದು ಮತ್ತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದ್ದಾರೆ.
ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರು ಎರಡು ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ ವಿನಃ ಈವರೆಗೂ ಸಮಸ್ಯೆಗೆ ಪರಿಹಾರ ಮಾತ್ರ ಕಂಡುಕೊಂಡಿಲ್ಲ ಎಂದು ದೂರಿದ್ದಾರೆ.
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಾರ್ವಜನಿಕರು ಉಗ್ರ ಹೋರಾಟಕ್ಕೆ ಮುಂದಾಗುವುದಕ್ಕಿಂತ ಮೊದಲೇ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾ ಆಡಳಿತ ಹಾಗೂ ಆಯುಕ್ತರಿಗೆ ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿರುವ ಕುಡಿಯುವ ನೀರು ಮತ್ತು ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಸರಬರಾಜು ಮಾಡಲು ಕೆಇಬಿ ಇಲಾಖೆಗೆ ಮೂಲ ಸೌಲಭ್ಯಗಳನ್ನು ಪೂರೈಸಬೇಕು. ಅಲ್ಲದೇ, ತಾವು ಕೂಡಾ ತಿಂಗಳೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೇ ಹಾವೇರಿ ನಗರ ಬಂದ್ ಮಾಡಿ ಹಗಲು -ರಾತ್ರಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಬಿಜೆಪಿ ನಗರ ಘಟಕ ಅಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ, ಮುಂಡರಾದ ಡಾ. ಮಲ್ಲೇಶಪ್ಪ ಹರಿಜನ, ಶಂಬಣ್ಣ ಗುಂಜಳ, ಮಂಜುನಾಥ ಓಲೇಕಾರ, ಶಿವನಗೌಡ್ರ ಎಸ್,ಎನ್. ಬಾಬಣ್ಣ ಏಕಬೋಟೆ, ಪುಟ್ಟು ಕಿತ್ತೂರ, ಚಂದ್ರು ಗಾಳೆಪ್ಪನವರ ಸೇರಿದಂತೆ ಅನೇಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.