ಹಾವೇರಿ: ಕೊಪ್ಪಳ ಉಪ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರು ಸುಮಾರು 15 ರಿಂದ 20 ಸಾವಿರ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಶುಕ್ರವಾರ ಶಿಕಾರಿಪುರಕ್ಕೆ ಹೋಗುವ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗಣ್ಣ ಕರಡಿ ಬಗ್ಗೆ ಜನರಲ್ಲಿ ಬಹಳಷ್ಟು ಕಳಕಳಿಯಿದೆ. ಹೀಗಾಗಿ ಅವರು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಬಿಜೆಪಿಯ ಎಲ್ಲ ನಾಯಕರು ಈ ಚುನಾವಣೆಯಲ್ಲಿ ಕೆಲಸ ಮಾಡುತ್ತಿ ರುವುದರಿಂದ ಇಲ್ಲಿ ನಾಯಕತ್ವ ಪ್ರಶ್ನೆಯೇ ಬರುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದರು.
ಸಿಬಿಐ ಅಕ್ರಮ ಗಣಿಗಾರಿಕೆ ಕುರಿತು ರಾಜ್ಯದಲ್ಲಿ ತನಿಖೆ ನಡೆಸುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಪಕ್ಕದ ಆಂಧ್ರದಲ್ಲಿ ತನಿಖೆ ನಡೆಸಿದೆ. ಅದರ ಮುಂದುವರೆದ ಭಾಗವಾಗಿ ರಾಜ್ಯದಲ್ಲಿ ತನಿಖೆ ನಡೆಯಬಹುದು. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇರುವುದಿಲ್ಲ ಎಂದು ಹೇಳಿದರು.
ರಾಜೀನಾಮೆ ನೀಡಿದ ರಾಮುಲು ಅವರನ್ನು ಶೀಘ್ರದಲ್ಲಿ ಕರೆದು ರಾಜೀನಾಮೆ ವಾಪಸ್ಸು ಪಡೆಯುವಂತೆ ಮನವೊಲಿಸಲಾಗುವುದು ಎಂದು ತಿಳಿಸಿದರು.
ಶಾಸಕ ನೆಹರೂ ಓಲೇಕಾರ, ಬಿಜೆಪಿ ಜಿಲ್ಲಾ ಘಟಕ ಹಾಗೂ ಕಾಡಾ ಅಧ್ಯಕ್ಷದ ಸೋಮಣ್ಣ ಬೇವಿನಮರದ, ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಿರೀಶ ತುಪ್ಪದ, ವಿಜಯಕುಮಾರ ಚಿನ್ನಿಕಟ್ಟಿ, ಪ್ರಭು ಹಿಟ್ನಳ್ಳಿ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.