ADVERTISEMENT

ಕರ್ತವ್ಯಕ್ಕೆ ಮರಳಿದ 518 ಗುತ್ತಿಗೆ ನೌಕರರು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 16:34 IST
Last Updated 7 ಅಕ್ಟೋಬರ್ 2020, 16:34 IST
ಅ.6ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ 
ಅ.6ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ    

ಹಾವೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.24ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ತೊಡಗಿದ್ದ ಜಿಲ್ಲೆಯ ಅರೆ ವೈದ್ಯಕೀಯ/ ವೈದ್ಯೇತರ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಬುಧವಾರ ಕರ್ತವ್ಯಕ್ಕೆ ಹಾಜರಾದರು.

ಬೆಂಗಳೂರಿನಲ್ಲಿ ಅ.6ರಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಲವು ಬೇಡಿಕೆಗಳನ್ನು ಈಡೇರಿಸಲು ಒಂದು ತಿಂಗಳ ಕಾಲಾವಕಾಶವನ್ನು ಕೇಳಿ, ಕರ್ತವ್ಯಕ್ಕೆ ಹಾಜರಾಗಲು ಸಚಿವರು ಮನವಿ ಮಾಡಿದ್ದರು.

‘ಈ ಹಿನ್ನೆಲೆಯಲ್ಲಿ ಅ.7ರಂದು ಬೆಂಗಳೂರಿನಲ್ಲಿ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ ಮತ್ತು ರಾಜ್ಯ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ಎಚ್‌.ವೈ. ನೇತೃತ್ವದಲ್ಲಿ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆ ನಡೆಯಿತು. ಸಚಿವರ ಮನವಿ ಮೇರೆಗೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರವನ್ನು ಅಂತ್ಯಗೊಳಿಸಿ, ಕರ್ತವ್ಯಕ್ಕೆ ಹಾಜರಾಗಲು ಸಭೆ ನಿರ್ಣಯ ತೆಗೆದುಕೊಂಡಿತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಬುಧವಾರ ಕರ್ತವ್ಯಕ್ಕೆ ಹಾಜರಾಗಿದ್ದೇವೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ವಸಂತಕುಮಾರ ಗೌಡ್ರ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಅ.7ರಂದು ‘ಪ್ರಜಾವಾಣಿ’ಯಲ್ಲಿ ‘ತೂಗುಯ್ಯಾಲೆಯಲ್ಲಿ 518 ನೌಕರರ ಭವಿಷ್ಯ’ ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ವಜಾಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ಮತ್ತು ಗುತ್ತಿಗೆ ನೌಕರರ ಸಂಕಷ್ಟದ ಬಗ್ಗೆ ವರದಿಯಲ್ಲಿ ಬೆಳಕು ಚೆಲ್ಲಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.