ಬ್ಯಾಡಗಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ವಸತಿ ಶಾಲೆಗಳನ್ನು ತೆರೆಯುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 15 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಿ ಅವರು ಮಾತನಾಡಿದರು. ಕಳೆದ ಬಜೆಟ್ನಲ್ಲಿ ಒಟ್ಟು ₹ 18 ಸಾವಿರ ಕೋಟಿಯನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿದೆ’ ಎಂದರು.
ಮುಖಂಡ ಎಸ್.ಆರ್.ಪಾಟೀಲ ಮಾತನಾಡಿ, ‘ಈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣ ಸೇರಿ ದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ₹3 ಕೋಟಿ ಅನುದಾನ ಒದಗಿಸಲಾಗಿದೆ’ ಎಂದರು. ವಿದ್ಯಾರ್ಥಿಗಳು ಅತ್ಯಮೂಲ್ಯ ಸಮಯವನ್ನು ವ್ಯರ್ಥ ಮಾಡದೇ, ಅಭ್ಯಾಸದಲ್ಲಿ ತೊಡಗಬೇಕು. ಇದರಿಂದ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ದಾನಪ್ಪ ತೋಟದ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸವಿತಾ ಸುತ್ತಕೋಟಿ, ಪುರಸಭೆ ಅಧ್ಯಕ್ಷ ಬಸವಣ್ಣೆಪ್ಪ ಛತ್ರದ, ಸದಸ್ಯ ಮಂಜುನಾಥ ಭೋವಿ, ಕಾಲೇಜು ಅಭಿವೃದ್ಧಿ ಸಮಿತಿಯ ಮಹೇಶ ಉಜನಿ, ಎಸ್.ಸಿ.ಗಂಗಣ್ಣನವರ, ಶ್ರೀನಿವಾಸ ಬೆಟಗೇರಿ, ಉಪನ್ಯಾಸಕರಾದ ಚಂದ್ರ ಕುಮಾರ.ಎಸ್., ರಾಜಕುಮಾರ ಉಕ್ಕುಂದ, ಗ್ರಂಥಪಾಲಕ ಡಾ.ನಿಂಗಪ್ಪ ಅರಬಗೊಂಡ, ಪ್ರಾಚಾರ್ಯ ಡಾ.ಸುರೇಶ ಹೆಚ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.