ಹಾವೇರಿ: ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹಾವೇರಿ ಶಾಖೆಯಿಂದ ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಒಗ್ಗೂಡಿದ ವಿದ್ಯಾರ್ಥಿಗಳು ಘೋಷಣೆ ಕೂಗಿದರು.ಶಾಲಾ–ಕಾಲೇಜು ಆರಂಭಗೊಂಡಿದ್ದರೂ ಹಳ್ಳಿಗಳಿಂದ ನಗರ ಮತ್ತು ಪಟ್ಟಣಗಳಿಗೆ ಬರಲು ಸಮರ್ಪಕ ಸಾರಿಗೆ ಬಸ್ ಸೌಲಭ್ಯವಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಸಕಾಲಕ್ಕೆ ತರಗತಿಗೆ ಹಾಜರಾಗಲು ತೊಡಕಾಗುತ್ತಿದೆ. ಕೂಡಲೇ ಬೆಳಿಗ್ಗೆ ಮತ್ತು ಸಂಜೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು, ಎರಡು ವರ್ಷಗಳಿಂದ ಬಿಡುಗಡೆಯಾಗದ ವಿದ್ಯಾರ್ಥಿವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಎಲ್ಲ ವಿದ್ಯಾರ್ಥಿಗಳಿಗೂ ಅಗತ್ಯವಾದ ಬಸ್ ಪಾಸ್ ಅನ್ನು ಸಮರ್ಪಕವಾಗಿ ಕೊಡಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಗಂಗಾಧರ ಕುಲಕರ್ಣಿ, ತಾಲ್ಲೂಕು ಸಂಚಾಲಕ ವಿಶ್ವನಾಥ್, ತಾಲ್ಲೂಕು ಸಹ ಸಂಚಾಲಕ ಮೇಘನಾಥ, ಲಿಂಗರಾಜ್ ಬೀದಿಮನಿ, ದರ್ಶನ್ ಅಕ್ಕಿ, ಪ್ರಮೋದ್ ಮೂಡಿ, ವರುಣ್, ಸುದೀಪ್, ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಹಶೀಲ್ದಾರ್ ಗಿರೀಶ ಸ್ವಾದಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.