ರಾಣೆಬೆನ್ನೂರು:ತಾಲ್ಲೂಕಿನ ಜೋಯಿಸರಹರಳಹಳ್ಳಿ - ಯರೇಕುಪ್ಪಿ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಬದಿ ಹೊಲದಲ್ಲಿ ಪಲ್ಟಿಯಾದ ಪರಿಣಾಮ 14 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಜೋಯಿಸರಹಳಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆಯುವ ಪ್ರತಿಭಾ ಕಾರಂಜಿಗೆ ಕಾರ್ಯಕ್ರಮಕ್ಕೆ ಕರೆದೊಯ್ದ ವಾಹನ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ.
ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದರು. ರಸ್ತೆ ಸಮೀಪ ಇದ್ದ ಜನರು ವಿದ್ಯಾರ್ಥಿಗಳನ್ನು ಬೇರೆ ಗಾಡಿಯಲ್ಲಿ ಕರೆದುಕೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪರಮೇಶ್ವರಪ್ಪ, ಡಾ. ವಾಣಿ ಸೂಕ್ತ ಚಿಕಿತ್ಸೆ ನೀಡಿದರು. ತಕ್ಷಣ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ಕ್ಷೇತ್ರ ಸಮನ್ವಯಾಧಿಕಾರಿ ಮಂಜು ನಾಯಕ ಹಾಗೂ ಸಿಬ್ಬಂದಿ ಭೇಟಿ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಿದರು.
ರಾಣೆಬೆನ್ನೂರು ಶಾಸಕ ಅರುಣಕುಮಾರ ಎಂ.ಗುತ್ತೂರು ಹಾಗೂ ಬ್ಯಾಡಗಿ ಮತಕ್ಷೇತ್ರದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ನರಸಗೊಂಡರ ಅವರು ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಿದರು.
ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ಕುರಿ ತುಂಬಿದಂತೆ ಕರೆದುಕೊಂಡು ಹೋಗಿದ್ದಕ್ಕೆ ಮಕ್ಕಳ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.