
ಹಾವೇರಿ: ‘ಚಿಕ್ಕಬಳ್ಳಾಪುರ ತಾಲ್ಲೂಕಿನ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತ ಅಮೃತ ಗೌಡ ಅವರನ್ನು ನಿಂದಿಸಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಆಗ್ರಹಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಗೆ ನಿಯೋಗದ ಮೂಲಕ ಶನಿವಾರ ಭೇಟಿ ನೀಡಿದ ಅಧಿಕಾರಿಗಳು, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
‘ಕಾನೂನು ಅನ್ವಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಬ್ಯಾನರ್ ವಿಚಾರವಾಗಿ ಪೌರಾಯುಕ್ತರಾದ ಅಮೃತ ಗೌಡ ಅವರಿಗೆ ಕರೆ ಮಾಡಿದ್ದ ರಾಜೀವ್ ಗೌಡ, ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಸಿದ್ದಾರೆ. ಜೊತೆಗೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಿದ್ದಾರೆ. ಇದರಿಂದ ಅಮೃತ ಗೌಡ ಮಾತ್ರವಲ್ಲದೇ, ರಾಜ್ಯದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅವಮಾನವಾಗಿದೆ’ ಎಂದು ಅಧಿಕಾರಿಗಳು ದೂರಿದರು.
‘ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ವಿರುದ್ಧ ಪ್ರಕರಣ ದಾಖಲಿಸಬೇಕು. ಅವರ ವಿರುದ್ಧ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಬೇಕು. ಮುಂಬರುವ ದಿನಗಳಲ್ಲಿ ಅಧಿಕಾರಿಗಳ ಮೇಲೆ ಇಂಥ ದೌರ್ಜನ್ಯಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿ. ಚಂದ್ರಪ್ಪ, ಪೌರಾಯುಕ್ತರಾದ ಎಚ್. ಕಾಂತರಾಜು, ಎಫ್.ವೈ. ಇಂಗಳಗಿ, ರಾಜ್ಯ ಪೌರ ಸೇವಾ ನೌಕರರ ಸಂಘದ ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಜರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.