ADVERTISEMENT

ಆಕ್ಸಿಜನ್ ಜನರೇಟರ್‌ ಸ್ಥಾಪನೆಗೆ ಕ್ರಮ-ಬಸವರಾಜ ಬೊಮ್ಮಾಯಿ

ಜಿಲ್ಲೆಗೆ ಪ್ರತಿದಿನ 6.7 ಮೆಟ್ರಿಕ್ ಟನ್ ಆಕ್ಸಿಜನ್ ಅಗತ್ಯ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 21 ಮೇ 2021, 16:25 IST
Last Updated 21 ಮೇ 2021, 16:25 IST
ಹಾವೇರಿ ಜಿಲ್ಲಾಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಕೋವಿಡ್‌ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು
ಹಾವೇರಿ ಜಿಲ್ಲಾಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಕೋವಿಡ್‌ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು   

ಹಾವೇರಿ: ‘ನಾಲ್ಕು ತಿಂಗಳೊಳಗೆ ಜಿಲ್ಲೆಯ ಎಲ್ಲ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್‌ ಸ್ಥಾಪಿಸುವ ಮೂಲಕ ಆಕ್ಸಿಜನ್ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು’ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಜಿಲ್ಲೆಗೆ ಪ್ರತಿದಿನ 6.7 ಮೆಟ್ರಿಕ್ ಟನ್ ಆಕ್ಸಿಜನ್ ಅಗತ್ಯವಿದೆ. 8ರಿಂದ 10 ಮೆಟ್ರಿಕ್‌ ಟನ್‌ ಪೂರೈಕೆಯಾಗುವಂತಾದರೆ ನಾವು ಸುರಕ್ಷಿತವಾಗಿರುತ್ತೇವೆ.ಜಿಲ್ಲಾ ಕೇಂದ್ರದಲ್ಲಿ 1500 ಕಿ.ಲೀ. ಆಕ್ಸಿಜನ್ ಜನರೇಟರ್ ನಿರ್ಮಾಣ ಕಾರ್ಯ ಆರಂಭವಾಗಿದೆ. ಶಿಗ್ಗಾವಿ, ಹಿರೇಕೆರೂರು ಹಾಗೂ ಹಾನಗಲ್‌ನಲ್ಲಿ 500 ಕಿ.ಲೀ. ಆಕ್ಸಿಜನ್ ಜನರೇಟರ್ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ಮಾಹಿತಿ ನೀಡಿದರು.

ರಾಣೆಬೆನ್ನೂರಿನಲ್ಲಿ ಗ್ರಾಸಿಂ ಕಂಪನಿ ಹಾಗೂ ಸವಣೂರಿನಲ್ಲಿ ರುದ್ರ ಕಂಪನಿಗಳು ಸಿಎಸ್‍ಆರ್ ನಿಧಿ ಅಡಿ ಆಕ್ಸಿಜನ್ ಜನರೇಟರ್ ಗಳನ್ನು ಸ್ಥಾಪಿಸಲಿವೆ. ಹೀಗೆ ಜಿಲ್ಲೆಯಲ್ಲಿ ಆಕ್ಸಿಜನ್ ಅನ್ನು ಉತ್ಪಾದನೆ ಮಾಡಲಾಗುವುದು.ನಾಲ್ಕು ತಿಂಗಳಲ್ಲಿ ಈ ಎಲ್ಲಾ ಆಕ್ಸಿಜನ್ ಘಟಕಗಳು ಕಾರ್ಯಾರಂಭ ಮಾಡುವಂತೆ ಕ್ರಮವಹಿಸಲಾಗುವುದು. ಅಕ್ಕಿಆಲೂರು ರಟ್ಟಿಹಳ್ಳಿ, ಬೊಮ್ಮನಹಳ್ಳಿ, ಗುತ್ತಲ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್‌ಗಳನ್ನು ಅಳವಡಿಸಲಾಗುತ್ತದೆ ಎಂದು ತಿಳಿಸಿದರು.

ADVERTISEMENT

ಹಾವೇರಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಇಲ್ಲ. ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ಕೊರತೆ ಇದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಇದ್ದರೂ ಅದನ್ನು ಪ್ರಾರಂಭ ಮಾಡಲು ಟೆಕ್ನೀಷಿಯನ್‍ಗಳಿಲ್ಲ. ಅದರ ಜತೆ ಕಪ್ಪು ಶಿಲೀಂಧ್ರ ಸಮಸ್ಯೆಗಳ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜೊತೆ ಚರ್ಚೆ ನಡೆಸುವುದಾಗಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆ ಇದ್ದರೂ, ಮರಣ ಪ್ರಮಾಣ ಅಧಿಕವಾಗಿದೆ. ಈ ಬಗ್ಗೆ ಖುದ್ದಾಗಿ ಆರೋಗ್ಯ ಸಚಿವರೇ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಸ್ಥಿತಿಗತಿಯನ್ನು ಪರಿಶೀಲಿಸುವಂತೆ ಮನವಿ ಮಾಡಿದ ಮೇರೆಗೆ ಸಚಿವರು ಜಿಲ್ಲೆಗೆ ಭೇಟಿ ನೀಡಿದ್ದಾರೆ.ಒಟ್ಟು ಎರಡು ಕೋಟಿ ವ್ಯಾಕ್ಸಿನ್‍ಗಾಗಿ ಗ್ಲೋಬಲ್ ಟೆಂಡರ್ ಕರೆಯಲಾಗಿದೆ. ಈ ಟೆಂಡರ್‌ನಲ್ಲಿ ಹಲವಾರು ಕಂಪನಿಗಳು ಭಾಗವಹಿಸಲಿವೆ ಎಂದು ಅವರು ತಿಳಿಸಿದರು.

ಕಪ್ಪು ಶಿಲೀಂಧ್ರ: 25 ಸಾವಿರ ವಯಲ್ಸ್‌ಗೆ ಬೇಡಿಕೆ

ಹಾವೇರಿ: ಕೇಂದ್ರ ಸಚಿವ ಸದಾನಂದಗೌಡ ಅವರೊಂದಿಗೆ ಮಾತುಕತೆ ನಡೆಸಿ, ಕಪ್ಪು ಶಿಲೀಂಧ್ರ ಸೋಂಕು ನಿಯಂತ್ರಣಕ್ಕೆ ರಾಜ್ಯಕ್ಕೆ 25 ಸಾವಿರ ವಯಲ್ಸ್‌ ಬೇಕು ಅಂತ ಬೇಡಿಕೆ ಇಟ್ಟಿದ್ದೆವು. ಇನ್ನೂ ಮೂರು ದಿನಗಳಲ್ಲಿ 10 ಸಾವಿರ ವಯಲ್ಸ್‌ ಬರುವ ನಿರೀಕ್ಷೆಯಿದೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಸರಪಳಿ ಕಳಚಲು ಸಹಾಯವಾಗುತ್ತಿದೆ. ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಶೇ 45ರಿಂದ ಶೇ 26ಕ್ಕೆ ಇಳಿಕೆಯಾಗಿದೆ.ತಜ್ಞರು ಜೂನ್‌ ಅಂತ್ಯದ ವೇಳೆಗೆ ಎರಡನೇ ಅಲೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ ಎಂದರು.

ಹಳ್ಳಿಗಳಲ್ಲಿ ಸೋಂಕು ಪ್ರಮಾಣ ನಿಯಂತ್ರಿಸಲು, ಕೋವಿಡ್‌ ಪೀಡಿತರನ್ನು ಕೂಡಲೇ ಕೋವಿಡ್‌ ಸೆಂಟರ್‌ಗೆ ದಾಖಲಿಸುವ ಕೆಲಸ ಮಾಡಲಾಗುವುದು. ಪ್ರತಿ ತಾಲ್ಲೂಕು ಆಸ್ಪತ್ರೆಗಳಿಗೆ ಕನಿಷ್ಠ 6 ವೆಂಟಿಲೇಟರ್‌ ಕಳುಹಿಸಿದ್ದೇವೆ. ಸಿಬ್ಬಂದಿ ಮತ್ತು ವೈದ್ಯರ ಕೊರತೆಯನ್ನು ವಾರದೊಳಗೆ ತುಂಬಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.