ಹಾವೇರಿ: ಜೆಡಿಎಸ್ ಜಿಲ್ಲಾ ಅಧ್ಯಕ್ಷರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಉಮೇಶ ತಳವಾರ, ಮಾಂತೇಶ ಶಿಡಗನಾಳ, ರವಿ ಭತ್ತದ, ಮಲ್ಲಿಕಾರ್ಜುನ ಬೇವಿನಮರದ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಜಯಾನಂದ ಜಾವಣ್ಣನವರ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜೆಡಿಎಸ್ ಕಾರ್ಯಕರ್ತರು ಪಕ್ಷದ ನಿಯಮಾವಳಿಗೆ ಬದ್ಧರಾಗಿರಬೇಕು. ವರಿಷ್ಠರ ಸೂಚನೆ, ಆದೇಶಗಳನ್ನು ತಪ್ಪದೇ ಪಾಲಿಸಬೇಕು. ಆದರೆ ಈ ನಾಲ್ವರು ಶಿಸ್ತು ನಡವಳಿಕೆ ಮತ್ತು ಬದ್ಧತೆಯನ್ನು ಮೀರಿ ಪಕ್ಷದ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ನನ್ನ ಬಗ್ಗೆ ವಾಟ್ಸ್ಆ್ಯಪ್ ಗ್ರೂಪ್ಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿತ್ತು. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಈ ನಾಲ್ವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಮುಖಂಡ ಎನ್. ಮಹೇಶಗೌಡ ಮಾತನಾಡಿ, ‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಬಗ್ಗೆ ತುಮಕೂರಿನ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಜಿಲ್ಲಾ ಘಟಕದಿಂದ ತೀವ್ರವಾಗಿ ಖಂಡಿಸುತ್ತೇವೆ. ರಾಜಣ್ಣ ಹೇಳಿಕೆಗಳು ಅವರ ಕೀಳು ಅಭಿರುಚಿಯನ್ನು ತೋರಿಸುತ್ತವೆ. ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಹಲಗೇರಿ, ಬಸವನಗೌಡ ಸಿದ್ದಪ್ಪಗೌಡ, ಕೆ.ಎಂ.ಸುಂಕದ, ಆರ್.ಬಿ.ಪಾಟೀಲ, ಪ್ರಕಾಶ ಬಾರ್ಕಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.