ADVERTISEMENT

ಹಾವೇರಿ | ಸುರಿವ ಮಳೆಯಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

₹ 10 ಸಾವಿರ ಗೌರವ ವೇತನಕ್ಕೆ ಆಗ್ರಹ | ಆಶಾ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 2:20 IST
Last Updated 13 ಆಗಸ್ಟ್ 2025, 2:20 IST
‘ಮಾಸಿಕ ₹ 10 ಸಾವಿರ ಗೌರವಧನ ನೀಡಬೇಕು’ ಎಂದು ಆಗ್ರಹಿಸಿ ಹಾವೇರಿಯಲ್ಲಿ ಧರಣಿ ಆರಂಭಿಸಿರುವ ಆಶಾ ಕಾರ್ಯಕರ್ತೆಯರು ಮಂಗಳವಾರ ರಾತ್ರಿ ಪೆಂಡಾಲ್‌ನಲ್ಲಿ ಮಲಗಿದ್ದರು
‘ಮಾಸಿಕ ₹ 10 ಸಾವಿರ ಗೌರವಧನ ನೀಡಬೇಕು’ ಎಂದು ಆಗ್ರಹಿಸಿ ಹಾವೇರಿಯಲ್ಲಿ ಧರಣಿ ಆರಂಭಿಸಿರುವ ಆಶಾ ಕಾರ್ಯಕರ್ತೆಯರು ಮಂಗಳವಾರ ರಾತ್ರಿ ಪೆಂಡಾಲ್‌ನಲ್ಲಿ ಮಲಗಿದ್ದರು   

ಹಾವೇರಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಭರವಸೆಯಂತೆ ಮಾಸಿಕ ₹ 10 ಸಾವಿರ ಗೌರವಧನ ನಿಗದಿಪಡಿಸಿ ಆದೇಶ ಹೊರಡಿಸಬೇಕು’ ಎಂದು ಆಗ್ರಹಿಸಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಮಂಗಳವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಹಾಕಿರುವ ಪೆಂಡಾಲ್‌ನಲ್ಲಿ ಕುಳಿತು ಆಶಾ ಕಾರ್ಯಕರ್ತೆಯರು ಧರಣಿ ನಡೆಸುತ್ತಿದ್ದಾರೆ. ಮಂಗಳವಾರ ನಗರದಲ್ಲಿ ಜೋರು ಮಳೆ ಸುರಿಯಿತು. ಇದರ ನಡುವೆಯೂ ಕಾರ್ಯಕರ್ತೆಯರು ಧರಣಿ ಮುಂದುವರಿಸಿದರು.

ರಾತ್ರಿಯೂ ಸ್ಥಳದಲ್ಲಿಯೇ ಅಡುಗೆ ಮಾಡಿ ಊಟ ಮಾಡಿದರು. ನಂತರ, ಹಲವರು ಪೆಂಡಾಲ್‌ ಒಳಗೆಯೇ ಮಲಗಿಕೊಂಡಿದ್ದರು.

ADVERTISEMENT

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಗಸ್ಟ್ 12ರಿಂದ 14ರವರೆಗೆ ರಾಜ್ಯದಾದ್ಯಂತ ಧರಣಿಗೆ ಕರೆ ನೀಡಲಾಗಿದೆ. ಅದರನ್ವಯ ಹಾವೇರಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಕೆಲಸಕ್ಕೆ ಗೈರಾಗಿ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ಆಕ್ರೋಶ: ‘ಮಾಸಿಕ ₹ 15 ಸಾವಿರ ನಿಶ್ಚಿತ ಗೌರವ ಧನ ನೀಡುವಂತೆ ಆಗ್ರಹಿಸಿ ಜನವರಿಯಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ಕೈಬಿಡುವಂತೆ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಸಿಕ ₹ 10 ಸಾವಿರ ಗೌರವಧನದ ಆದೇಶ ಹೊರಡಿಸುವುದಾಗಿ ಹೇಳಿದ್ದರು. ಆದರೆ, ಇದುವರೆಗೂ ಕೊಟ್ಟ ಮಾತು ಈಡೇರಿಸಿಲ್ಲ’ ಎಂದು ಆಶಾ ಕಾರ್ಯಕರ್ತೆಯರು ಆಕ್ರೋಶ ಹೊರಹಾಕಿದರು.

‘ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು, ಜನರ ಆರೋಗ್ಯ ರಕ್ಷಣೆಗಾಗಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಇಲಾಖೆಯ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ. ತಾಯಿ–ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡಿದ್ದಾರೆ. ಇಂಥವರಿಗೆ ಗೌರವ ಧನ ನೀಡಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದರು.

‘ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಪಾಲು ಸೇರಿ ಮಾಸಿಕ ₹ 10 ಸಾವಿರ ಗೌರವ ಧನ ನೀಡಬೇಕು. 2025ರ ಮಾರ್ಚ್‌ನ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1,000 ಪ್ರೋತ್ಸಾಹ ಧನ ಹೆಚ್ಚಳ ಮಾಡಿದಂತೆ ಆಶಾ ಕಾರ್ಯಕರ್ತೆಯರಿಗೂ ಮಾಡಬೇಕು. ಆಶಾ ಕಾರ್ಯಕರ್ತೆಯರ ಕೆಲಸದ ವ್ಯಾಪ್ತಿಯನ್ನು ಹೆಚ್ಚಳ ಮಾಡುತ್ತಿರುವ ಪ್ರಕ್ರಿಯೆ ಕೈಬಿಡಬೇಕು. ಕಾರ್ಯನಿರ್ವಹಣೆ ಮೌಲಮಾಪನದ ವ್ಯವಸ್ಥೆ ಅವೈಜ್ಞಾನಿಕವಾಗಿದೆ. ಈ ಪದ್ಧತಿ ರದ್ದುಪಡಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ಪಶ್ಚಿಮ ಬಂಗಾಳ ಮಾದರಿಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಇಡಿಗಂಟು ನೀಡಬೇಕು. ನಗರ ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುರಿಯಾಗಿ ಮಾಸಿಕ ₹ 2,000 ಗೌರವ ಧನ ನೀಡಬೇಕು’ ಎಂದು ಒತ್ತಾಯಿಸಿದರು.

ಗಂಭೀರ ಹೋರಾಟಕ್ಕೆ ಚಿಂತನೆ: ‘ಮುಖ್ಯಮಂತ್ರಿಯವರು ಕೊಟ್ಟ ಮಾತು ಉಳಿಸಿಕೊಳ್ಳಬೇಕೆಂಬುದು ಆಗ್ರಹಿಸಿ ಮೂರು ದಿನ ಧರಣಿ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಸ್ಪಂದನೆ ಸಿಗದಿದ್ದರೆ, ಮುಂಬರುವ ದಿನಗಳಲ್ಲಿ ಗಂಭೀರ ಸ್ವರೂಪದ ಹೋರಾಟ ನಡೆಸಲು ಚಿಂತನೆ ನಡೆಸಲಾಗುವುದು’ ಎಂದು ಪ್ರತಿಭಟನಕಾರರು ಎಚ್ಚರಿಸಿದರು. 

‘₹10 ಸಾವಿರ ಗೌರವ ಧನ ನೀಡಬೇಕು’ ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಹಾವೇರಿಯ ಮೈಲಾರ ಮಹದೇವಪ್ಪ ವೃತ್ತದಲ್ಲಿ ಮಂಗಳವಾರ ಧರಣಿ ಆರಂಭಿಸಿದರು

ಮೂರು ದಿನಗಳ ಧರಣಿ ಮೈಲಾರ ಮಹದೇವಪ್ಪ ವೃತ್ತದಲ್ಲಿ ಪೆಂಡಾಲ್ ಸ್ಥಳದಲ್ಲೇ ಊಟ, ನಿದ್ದೆ

ಪ್ರತಿಭಟನಾ ಮೆರವಣಿಗೆ ಹಾವೇರಿಯ ಮುರುಘಾಮಠದಿಂದ ಮೈಲಾರ ಮಹದೇವಪ್ಪ ವೃತ್ತದವರೆಗೂ ಆಶಾ ಕಾರ್ಯಕರ್ತೆಯರು ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತೆಯರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.