ADVERTISEMENT

ಆಯುಷ್ ಔಷಧದಲ್ಲಿ ರೋಗ ನಿರೋಧಕ ಶಕ್ತಿ: ಓಲೇಕಾರ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 12:58 IST
Last Updated 1 ಜೂನ್ 2020, 12:58 IST
ಹಾವೇರಿ ನಗರದಲ್ಲಿ ಸೋಮವಾರ ಶಾಸಕ ನೆಹರು ಓಲೇಕಾರ ಅವರು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಔಷಧಗಳನ್ನು ಜನರಿಗೆ ವಿತರಿಸಿದರು 
ಹಾವೇರಿ ನಗರದಲ್ಲಿ ಸೋಮವಾರ ಶಾಸಕ ನೆಹರು ಓಲೇಕಾರ ಅವರು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಔಷಧಗಳನ್ನು ಜನರಿಗೆ ವಿತರಿಸಿದರು    

ಹಾವೇರಿ: ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುಷ್ ಔಷಧಗಳ ಪಾತ್ರ ಮುಖ್ಯವಾಗಿದ್ದು, ಕೊರೊನಾ ಹಿಮ್ಮೆಟ್ಟಿಸಲು ಇದರ ಅವಶ್ಯವಿದೆ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದ ಸರ್ಕಾರಿ ಪ್ರಾಥಮಿಕ ಶಾಲೆ ನಂ.2ರಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಸೋಮವಾರ ಜರುಗಿದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಔಷಧಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ತಡೆಗಟ್ಟಲು ಸರ್ಕಾರ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಆಯುಷ್ ಇಲಾಖೆ ಮೂಲಕ ಔಷಧಗಳನ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಜಿಲ್ಲೆಯ ಪ್ರತಿ ಮನೆ–ಮನೆಗೆ ತೆರಳಿ ರೋಗ ನಿರೋಧಕ ಮಾತ್ರೆಗಳನ್ನು ವಿತರಿಸಬೇಕು ಎಂದು ತಿಳಿಸಿದರು.

ADVERTISEMENT

ಕೊರೊನಾ ರೋಗವು ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದು, ಕೊರೊನಾ ವಿರುದ್ಧ ಹೋರಾಡಲು ಈ ಮಾತ್ರೆಗಳು ಪ್ರಯೋಜನಕಾರಿ. ಚಿಕ್ಕವರಿಂದ ವೃದ್ಧರವರೆಗೆ ಪ್ರತಿಯೊಬ್ಬರೂ ಆಯುಷ್ ಮಾತ್ರೆಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಕೊರೊನಾ ಸೋಂಕು ಹರಡದಂತೆ ಎಲ್ಲರೂ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಎ.ಎಸ್.ಶಿರೂಳ, ಆರ್‌ಎಂಒ ಡಾ.ಸುರೇಶ ಪೂಜಾರ, ಹಿರಿಯ ತಜ್ಞ ವೈದ್ಯ ಡಾ.ಎಲ್.ಎಲ್. ರಾಠೋಡ, ಆಯುಷ್ಯ ವೈದ್ಯಾಧಿಕಾರಿ ಡಾ.ರಾಜಶೇಖರ ಹೊಸಮನಿ, ಪ್ರಭಾರ ನರ್ಸಿಂಗ್ ಅಧೀಕ್ಷಕರಾದ ರಾಜೇಶ್ವರಿ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ್, ಡಾ.ಆರ್.ಎನ್.ಕೆರೂರ್, ಡಾ.ರಾಕಿ ದೂಡ್ಡಮನಿ, ಸುಧಾಕರ ದೈವಜ್ಞ, ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.