ಹಾವೇರಿ: ‘ದಿನೇ ದಿನೇ ವಾಯುಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ವಾಯು ಮಾಲಿನ್ಯ ತಡೆಗೆ ಕೂಡಲೇ ಎಲ್ಲರೂ ಜಾಗೃತರಾಗುವುದು ಅವಶ್ಯವಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಹಾವೇರಿ ಸೈಕ್ಲಿಂಗ್ ಕ್ಲಬ್ ಸಹಯೋಗದಲ್ಲಿ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ಸಮಯದಲ್ಲಿ ಆಮ್ಲಜನಕದ ಪ್ರಾಮುಖ್ಯತೆ ಎಷ್ಟೆಂದು ನಾವೆಲ್ಲರೂ ತಿಳಿದುಕೊಂಡಿದ್ದೇವೆ. ಪರಿಸರ ಸಂರಕ್ಷಣೆ ನಮ್ಮೆಲರ ಹೊಣೆಯಾಗಿದೆ. ಹೆಚ್ಚಾಗಿ ಸೈಕಲ್ ಬಳಸುವ ಮೂಲಕ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸಬಹುದು ಎಂದು ಹೇಳಿದರು.
ಹಾವೇರಿ ಸೈಕ್ಲಿಂಗ್ ಕ್ಲಬ್ ಅಧ್ಯಕ್ಷ ಡಾ.ಎಂ.ಆರ್.ರಾವ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಉಸಿರಾಟದ ತೊಂದರೆ ಹೆಚ್ಚಾಗುತ್ತಿದೆ. ಸೈಕಲ್ ಬಳಸುವ ಮೂಲಕ ಹಾಗೂ ಗಿಡಗಳನ್ನು ಬೆಳೆಸುವ ಮೂಲಕ ವಾಯು ಮಾಲಿನ್ಯ ನಿಯಂತ್ರಿಸಬಹುದು ಎಂದು ಹೇಳಿದರು.
ವಾಯು ಮಾಲಿನ್ಯ ನಿಯಂತ್ರಣ ಕುರಿತಾದ ಕಿರುಹೊತ್ತಿಗೆಯನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಹಾವೇರಿ ಪೊಲೀಸ್ ವೃತ್ತ ನಿರೀಕ್ಷಕ ಸುರೇಶ ಸಗರಿ, ಸಾರಿಗೆ ಇಲಾಖೆ ರಮೇಶ ಎಚ್.ದೊಡ್ಡಮನಿ, ಶ್ರೀಪಾದ ಬ್ಯಾಳಿ, ಗುರುಮೂರ್ತಿ ಎನ್.ತೆಂಬದ, ಶಂಭುಲಿಂಗ ಹೊಸಳ್ಳಿಮಠ, ಹಾವೇರಿ ಸೈಕ್ಲಿಂಗ್ ಕ್ಲಬ್ ಸದಸ್ಯರಾದ ಡಾ.ಶ್ರವಣ ಪಂಡಿತ, ಪ್ರಶಾಂತ ದೊಡ್ಡಮನಿ, ಅರವಿಂದ, ಸಂಜಯ ಗುಂಜೆಟ್ಟಿ, ಶ್ರೇಯಸ್ಸ ದೊಡ್ಡಮನಿ, ಉಜ್ವಲ್ ಹಿರೇಗೌಡರ, ಗಾಣಿಗೇರ, ಪ್ರಸನ್ನ ಧಾರವಾಡಕರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.