ADVERTISEMENT

ಸಾಂಸ್ಥಿಕ ಕ್ವಾರಂಟೈನ್‌: ತೀವ್ರ ನಿಗಾವಹಿಸಿ

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಮೇ 2020, 14:43 IST
Last Updated 28 ಮೇ 2020, 14:43 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಅವರು ಅಧಿಕಾರಿಗಳ ಸಭೆ ನಡೆಸಿದರು 
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಅವರು ಅಧಿಕಾರಿಗಳ ಸಭೆ ನಡೆಸಿದರು    

ಹಾವೇರಿ: ಸಾಂಸ್ಥಿಕ ಕ್ವಾರಂಟೈನ್‍ನಲ್ಲಿರುವವರನ್ನು ಅವರ ಆರೋಗ್ಯ, ವಯೋಮಾನಕ್ಕನುಗುಣವಾಗಿ ಪ್ರತ್ಯೇಕವಾಗಿಸಿ ನಿಗಾವಹಿಸಿ ಎಂದುಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು.

ಕೊರೊನಾ ಹರಡುವಿಕೆಯ ನಿಯಂತ್ರಣ ಕುರಿತಂತೆ ಕೋವಿಡ್ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಭೆ ನಡೆಸಿದ ಅವರು ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ತೀವ್ರ ನಿಗಾವಹಿಸಬೇಕು. ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು ಸಮನ್ವಯ ಹಾಗೂ ಚುರುಕಿನಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಕ್ವಾರಂಟೈನ್‍ನಲ್ಲಿರುವ ಪ್ರತಿಯೊಬ್ಬರ ಹೆಲ್ತ್‌ ಪ್ರೋಪೈಲ್ ಚೆಕ್‍ಮಾಡಿ, 55ರಿಂದ 60 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು, 10 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು, ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು, ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾದವರನ್ನು ಕ್ವಾರಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ಅವರ ಆರೋಗ್ಯ ತಪಾಸಣೆ ಸೇರಿದಂತೆ ತೀವ್ರ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಟಿಬಿ ಹಾಗೂ ಎಚ್.ಐ.ವಿ. ಸೋಂಕಿತರ ಆರೋಗ್ಯದ ಬಗ್ಗೆ ತೀವ್ರ ನಿಗಾವಹಿಸಬೇಕು. ಅವರಿಗೆ ಅವಶ್ಯವಿರುವ ಔಷಧಿಗಳನ್ನು ಮುಂಚಿತವಾಗಿ ನೀಡಬೇಕು. ಎಚ್.ಐ.ವಿ. ಕೌನ್ಸಿಲರ್‌ಗಳು ಪ್ರತಿದಿನ ದೂರವಾಣಿ ಮೂಲಕ ಎಚ್.ವಿ. ಬಾಧಿತರೊಂದಿಗೆ ಸಮಾಲೋಚನೆ ನಡೆಸಬೇಕು. ಪ್ರತಿ ಕೌನ್ಸಿಲರ್ ಕನಿಷ್ಠ 50 ಎಚ್.ಐ.ವಿ. ಬಾಧಿತರೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸಭೆಯಲ್ಲಿ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿಗಳಾದ ಡಾ.ದಿಲೀಷ್ ಶಶಿ, ಅನ್ನಪೂರ್ಣ ಮುದಕಮ್ಮನವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಡಿಡಿಪಿಐ ಅಂದಾನೆಪ್ಪ ವಡಗೇರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಕೆ.ಹಾವನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.