ಬ್ಯಾಡಗಿ: ತಾಲ್ಲೂಕಿನ ಚಿಕ್ಕಬಾಸೂರು ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಸಮಾರೋಪ ಹಾಗೂ ಬಿ.ಎ ಮತ್ತು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಿವೃತ್ತ ಸಹಾಯಕ ಪ್ರಾಧ್ಯಾಪಕ ಜಿ.ವಿ.ಕೋರಿ ಮಾತನಾಡಿ, ಸಾಂಸ್ಕೃತಿಕ ಹಾಗೂ ಪಠ್ಯೇತರ ಚಟುವಟಿಕೆಗಳು ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಬಲ್ಲವು. ಹೀಗಾಗಿ ದೇಶಿಯ ಪರಂಪರೆ ಬಿಂಬಿಸುವ ಕಲೆಗಳನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅವರಿಗೆ ಮಾರ್ಗದರ್ಶನ ನೀಡಬೇಕಾಗಿದೆ ಎಂದು ಹೇಳಿದರು.
‘ತಾವು ಕಲಿತ ವಿಷಯಗಳನ್ನು ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲಲಿತಾ ವಾಲ್ಮೀಕಿ ಮಾತನಾಡಿ, ಯಶಸ್ಸು ಕೇವಲ ಗುರಿ ತಲುಪುವ ಉದ್ದೇಶ ಹೊಂದಿರದೆ, ಅದನ್ನು ಜೀವನದಲ್ಲಿ ಹೇಗೆ ಅಳವಡಿಸಿಕೊಂಡು ನಡೆಯಬೇಕು ಎನ್ನುವದನ್ನು ಕಲಿಯಬೇಕೆಂದು ಹೇಳಿದರು.
ಸಾಂಸ್ಕೃತಿಕ ವಿಭಾಗದ ಸಂಚಾಲಕ ಶಿವಮೂರ್ತಿ ಎಚ್.ವಿ ವಾರ್ಷಿಕ ವರದಿ ವಾಚಿಸಿದರು. ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಾಂಶುಪಾಲ ಸೈಯದ್ಸಾಬ್ ಮುಜಾವರ್ ಪ್ರಶಸ್ತಿಪತ್ರ ವಿತರಿಸಿದರು. ಉಪನ್ಯಾಸಕ ರವಿಕುಮಾರ್ ಎಂ, ದಿವ್ಯಾ ಕರಡೇಕರ್, ಸುಪ್ರಿಯ ಸರ್ವರ, ಯದುಕುಮಾರ್, ಹನುಮಂತಪ್ಪ ವಾಲ್ಮೀಕಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.