
ಬಸವರಾಜ ಶಿವಣ್ಣನವರ
ಹಾವೇರಿ: ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಹುಬ್ಬಳ್ಳಿಯ ವಿಹಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ನಗರದಲ್ಲಿ ಫೆ. 14ರಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದ್ದು, ಇದರ ತಯಾರಿ ಕೆಲಸಗಳ ಬಗ್ಗೆ ಬಸವರಾಜ ಶಿವಣ್ಣನವರ ನಿತ್ಯವೂ ಪರಿಶೀಲಿಸುತ್ತಿದ್ದರು. ಸಮಾವೇಶದ ಸ್ಥಳಕ್ಕೂ ಪದೇ ಪದೇ ಭೇಟಿ ನೀಡುತ್ತಿದ್ದರು. ಗುರುವಾರ ರಾತ್ರಿಯೂ ಭೇಟಿ ನೀಡಿ ಮನೆಗೆ ವಾಪಸು ಹೋಗಿದ್ದರು.
ಶುಕ್ರವಾರ ಬೆಳಿಗ್ಗೆ ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡಿತ್ತು. ಇದರಿಂದಾಗಿ ಅವರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ತೆರಳಿದ್ದರು. ಆರೋಗ್ಯ ತಪಾಸಣೆ ನಡೆಸಿದ ವೈದ್ಯರು, ಹೃದಯದಲ್ಲಿ ಸಮಸ್ಯೆ ಇರುವುದನ್ನು ಪತ್ತೆ ಮಾಡಿದರು. ನಂತರ, ಶಸ್ತ್ರಚಿಕಿತ್ಸೆ ಮಾಡಿ ಶಿವಣ್ಣನವರ ಅವರಿಗೆ ಸ್ಟಂಟ್ ಅಳವಡಿಕೆ ಮಾಡಿದ್ದಾರೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.