ಬ್ಯಾಡಗಿ: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲ್ಲೂಕಿನ ಮೋಟೆಬೆನ್ನೂರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಮೇಲ್ಸೇತುವೆ ಏಕಮುಖ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೋಮವಾರ ಮಳೆಯಲ್ಲಿಯೇ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾದ ಕಾರಣ ಮೇಲ್ಸೇತುವೆ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ನಂತರ ಕಾಮಗಾರಿ ಆರಂಭಿಸುವ ವೇಳೆಗೆ ಹೆಚ್ಚುವರಿ ಅಂಡರ್ಪಾಸ್ ನಿರ್ಮಾಣಕ್ಕೆ ಜನರಿಂದ ಮನವಿ ಸಲ್ಲಿಸಲಾಗಿತ್ತು. ಆ ವೇಳೆಗೆ ಗುತ್ತಿಗೆ ಪಡೆದಿದ್ದ ಎಜೆನ್ಸಿ ಅವಧಿ ಮುಗಿದಿದ್ದರಿಂದ ನಾಲ್ಕು ವರ್ಷದ ಬಳಿಕ ಕಾಮಗಾರಿ ಈಗ ಪೂರ್ಣಗೊಂಡಿದೆ.
ಈ ಹಿನ್ನೆಲೆಯಲ್ಲಿ ಹಾವೇರಿಯಿಂದ ರಾಣೆಬೆನ್ನೂರು ಕಡೆಗೆ ಸಾಗುವ ವಾಹನಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಇನ್ನು ಸ್ವಲ್ಪು ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇನ್ನೊಂದು ಬದಿಯ ರಸ್ತೆ ಕಾಮಗಾರಿ ಪೂರ್ಣಗೊಳಿಸಲಿದೆ ಎಂದರು.
ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಸಾಕಷ್ಟು ತೊಂದರೆಗಳಾಗಿದ್ದವು. ಅಲ್ಲದೆ ಬ್ಯಾಡಗಿ ಮಾರುಕಟ್ಟೆಗೆ ಆಗಮಿಸುವ ವಾಹನಗಳಿಗೂ ಕೂಡ ದಟ್ಟಣೆ ಉಂಟಾಗುತ್ತಿತ್ತು. ಸದ್ಯ ಏಕಮುಖ ಸಂಚಾರಕ್ಕೆ ಚಾಲನೆ ದೊರೆತಿದೆ ಎಂದರು.
ಈ ವೇಳೆ ರಾಣೆಬೆನ್ನೂರ ಶಾಸಕ ಪ್ರಕಾಶ ಕೋಳಿವಾಡ, ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಎಸ್ಪಿ ಯಶೋಧಾ ವಂಟಗೋಡಿ, ಸಿಇಒ ರುಚಿ ಬಿಂದಾಲ್, ತಹಶೀಲ್ದಾರ್ ಫಿರೋಜಷಾ ಸೋಮನಕಟ್ಟಿ, ಹಾಗೂ ಮುಂತಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.