ADVERTISEMENT

ಅವ್ಯವಹಾರ ಪ್ರಕರಣ: ಕಠಿಣ ಕ್ರಮಕ್ಕೆ ಬಸವರಾಜ ಪೂಜಾರ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 5:00 IST
Last Updated 25 ಜೂನ್ 2022, 5:00 IST
ಹಾವೇರಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು 
ಹಾವೇರಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು    

ಹಾವೇರಿ:ತಾಲ್ಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತ್ವರಿತಗತಿಯಲ್ಲಿ ತನಿಖೆಗೊಳಪಡಿಸಿ, ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕಾಲೇಜಿಗೆ ಕುಡಿಯುವ ನೀರು, ಶೌಚಾಲಯ, ಕ್ಯಾಂಟೀನ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನ ಒದಗಿಸಬೇಕು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದರು.

ಶುಕ್ರವಾರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ಕಾಲೇಜಿನ ಆವರಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ ತವರು ಜಿಲ್ಲೆಯ ಏಕೈಕ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಲ, ಕಾಲೇಜ್ ಮತ್ತು ಹಾಸ್ಟೆಲ್‌ ಶುಲ್ಕದಲ್ಲಿ ಕೋಟ್ಯಂತರ ಹಣವನ್ನು ಲೂಟಿ ಮಾಡಿ ಭ್ರಷ್ಟಾಚಾರ ನಡೆಸಿರುವುದು ಮಾಧ್ಯಮಗಳ ವರದಿಯಿಂದ ಬಯಲಾಗಿದೆ. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ ಹಣವನ್ನು ಕಸಿದಿರುವುದು ಖಂಡನೀಯ ಎಂದರು.

ADVERTISEMENT

ಕಾಲೆಜಿನಲ್ಲಿ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿ ಬೇಕಾದ ಕುಡಿಯುವ ನೀರು, ಶೌಚಾಲಯಗಳು ಬಳಸಲು ಯೋಗ್ಯವಾಗಿಲ್ಲ. ಪಠ್ಯ ಪುಸ್ತಕಗಳು, ಜರ್ನಲ್, ಐ.ಎ ಪುಸ್ತಕಗಳ ಕೊರತೆ, ಕ್ಯಾಂಟೀನ್ ಇಲ್ಲದಿರುವುದು ಹಾಗೂ ಹಾಸ್ಟೆಲ್ ಕಟ್ಟಡಗಳು ನಿರ್ಮಾಣವಾಗಿದ್ದರೂ ಅಗತ್ಯ ಸಲಕರಣೆಗಳನ್ನು ಅಳವಡಿಸದೇ ವಿದ್ಯಾರ್ಥಿಗಳಿಗೆ ನೀಡದಿರುವುದರಿಂದಾಗಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೀವ್ರ ತೊಂದರೆಯನ್ನುಂಟು ಮಾಡಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇತ್ತ ಗಮನ ಗಹರಿಸಿ, ಈ ಸಮಸ್ಯೆ ಪರಿಹರಿಸಬೇಕು ಎಂದರು.

ಹಾವೇರಿ ಮತ್ತು ಇತರ ಭಾಗಗಳಿಂದ ಕಾಲೇಜಿಗೆ ಬರುವ ವಿಧ್ಯಾರ್ಥಿಗಳಿಗೆ ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲದಿರುವುದರಿಂದ ಖಾಸಗಿ ವಾಹನಗಳಲ್ಲಿ ಹಣ ವ್ಯಯ ಮಾಡುವ ಸ್ಥಿತಿ ಇದೆ. ವಿದ್ಯಾರ್ಥಿಗಳಿಗೆ ಅಗತ್ಯವಿರುವಷ್ಟು ಬಸ್ ಸೌಲಭ್ಯ ಒದಗಿಸಬೇಕು ಎಂದರು.

ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯ ಲಕ್ಷ್ಮಣ ಮಾತನಾಡಿ, ವಿದ್ಯಾರ್ಥಿಗಳು ವರ್ಷದ ಕೊನೆಯ ಸೆಮಿಸ್ಟರನಲ್ಲಿ ಓದುತ್ತಿದ್ದರೂ ಸಹ ಕ್ಯಾಲ್ಕುಲೇಟರ್, ಲ್ಯಾಪ್ ಟಾಪ್ ವಿತರಣೆ ಮಾಡಿರುವುದಿಲ್ಲ. ಸರಕಾರ ಕೂಡಲೇ ಅಗತ್ಯ ಸೌಕರ್ಯಗಳನ್ನು ಬಿಡುಗಡೆಗೊಳಿಸಬೇಕು ಎಂದರು.

ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಎಸ್ಎಫ್ಐ ತಾಲೂಕ ಸಹ ಕಾರ್ಯದರ್ಶಿ ಅರುಣ ಕಡಕೋಳ, ಜಿಲ್ಲಾ ಮುಖಂಡರಾದ ಹೊನ್ನಪ್ಪ ತಳವಾರ, ಪ್ರದೀಪ ಕುರಿ, ನಂದೀಶ ಪಾಟೀಲ, ಜಗನ್ನಾಥ, ಅರವಿಂದ ಗೌಡ, ಸುದೀಪ ಯಲಿವಾಳ, ಪ್ರಿಯರಂಜನ ಸೇರಿದಂತೆ ಹಲವು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.