ADVERTISEMENT

ಮಕ್ಕಳ ಸಹಾಯವಾಣಿ: ಜಾಗೃತಿ ಮೂಡಿಸಿ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 15:33 IST
Last Updated 25 ಸೆಪ್ಟೆಂಬರ್ 2020, 15:33 IST
ಸಂಜಯ ಬಿ.ಶೆಟ್ಟೆಣ್ಣವರ, ಜಿಲ್ಲಾಧಿಕಾರಿ
ಸಂಜಯ ಬಿ.ಶೆಟ್ಟೆಣ್ಣವರ, ಜಿಲ್ಲಾಧಿಕಾರಿ   

ಹಾವೇರಿ: ಮಕ್ಕಳ ಹಕ್ಕುಗಳು, ಮಕ್ಕಳ ಸಮಸ್ಯೆಗಳ ನಿವಾರಣೆ, ಮಕ್ಕಳ ಸಹಾಯವಾಣಿ ಹಾಗೂ ಮಕ್ಕಳ ರಕ್ಷಣಾ ಘಟಕ ಕುರಿತಂತೆ ಜಿಲ್ಲೆಯ ಎಲ್ಲ ವಿದ್ಯಾರ್ಥಿ ನಿಲಯಗಳ ವಾರ್ಡನ್‍ಗಳಿಗೆ ತಾಲ್ಲೂಕುವಾರು ಕಾರ್ಯಾಗಾರ ನಡೆಸಿ ಹಾಗೂ ಮಕ್ಕಳ ಸಹಾಯವಾಣಿ ಕುರಿತಂತೆ ಜಾಗೃತಿ ಫಲಕಗಳ ಗೋಡೆ ಬರಹ, ಭಿತ್ತಿಪತ್ರಗಳ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಕ್ಕಳ ಸಹಾಯವಾಣಿ ಕುರಿತ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಲ್ಲಿಕಾರ್ಜುನ ಮಠದ, ವಿಶೇಷ ಪಾಲನಾ ಯೋಜನೆಯಡಿ ₹15.38 ಲಕ್ಷ ವೆಚ್ಚದಲ್ಲಿ 769 ಜನರಿಗೆ ನೆರವು ಒಗಿಸಲಾಗಿದೆ. ಪ್ರಾಯೋಜಕತ್ವ ಕಾರ್ಯಕ್ರಮದಡಿ ₹4.56 ಲಕ್ಷ ವೆಚ್ಚದಲ್ಲಿ 59 ಜನರಿಗೆ ನೆರವು ಒದಗಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ 110 ಪ್ರಕರಣಗಳು ದಾಖಲಾಗಿದ್ದು, ಏಳು ಪ್ರಕರಣಗಳು ವಿಲೇವಾರಿಯಾಗಿವೆ. 103 ಪ್ರಕರಣಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು.

ADVERTISEMENT

ಬಾಲ ನ್ಯಾಯ ಮಂಡಳಿ 36 ಪ್ರಕರಣಗಳನ್ನು ಸ್ವೀಕರಿಸಿದ್ದು, 11 ಪ್ರಕರಣಗಳು ಇತ್ಯರ್ಥವಾಗಿವೆ. 25 ಪ್ರಕರಣಗಳು ಬಾಕಿ ಇವೆ. ಬಾಲ ನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಜಿಲ್ಲೆಯ ಆರು ಸಂಸ್ಥೆಗಳಲ್ಲಿ 124 ಮಕ್ಕಳು ದಾಖಲಾಗಿದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.

ಮಕ್ಕಳ ಸಹಾಯವಾಣಿ ಕೇಂದ್ರ ಸಂಯೋಜಕ ಮಂಜುನಾಥ ರಾಯದುರ್ಗ ವಿವರ ನೀಡಿ, 2019ರ ಏಪ್ರಿಲ್‌ನಿಂದ ಸೆಪ್ಟೆಂಬರ್- 2020ರವರೆಗೆ 2,146 ಕರೆಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ ದೈಹಿಕ ದೌರ್ಜನ್ಯ, ಬಾಲವಿವಾಹ, ಶಾಲೆ ಬಿಟ್ಟ ಮಕ್ಕಳು, ವೈದ್ಯಕೀಯ ಸೌಲಭ್ಯ, ವಸತಿ ಸೌಲಭ್ಯ, ಮಾನಸಿಕ ದೌರ್ಜನ್ಯದಂತಹ ಕರೆಗಳು ಹೆಚ್ಚಾಗಿವೆ ಎಂದು ವಿವರಿಸಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಮಜೀದ್ ಮಾಹಿತಿ ನೀಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಸ್ವಾಗತಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.