ಹಾವೇರಿ: ‘ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾಗಿರುವುದು ವಿಷಾದನೀಯ ಸಂಗತಿ. ಇವುಗಳ ತಡೆಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಆಯೋಗಕ್ಕೂ ವರದಿ ನೀಡಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸೂಚನೆ ನೀಡಿದರು.
ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಬಾಲಕಿಯರು ಹಾಗೂ ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ಬಾಲ್ಯವಿವಾಹ ಹಾಗೂ ಬಾಲಗರ್ಭಿಣಿಯರ ಪ್ರಕರಣಗಳ ತಡೆಗೆ ಶಾಲಾ–ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಲೈಂಗಿಕ ದೌರ್ಜನ್ಯ ತಡೆಗಾಗಿ ಆಂತರಿಕ ದೂರು ಸಮಿತಿ ರಚಿಸಬೇಕು. ಎಲ್ಲ ಕಡೆಯೂ ಸೂಚನಾ ಫಲಕಗಳನ್ನು ಪ್ರದರ್ಶಿಸಬೇಕು. ದೌರ್ಜನ್ಯ ಪ್ರಕರಣಗಳ ಸಂತ್ರಸ್ತೆಗೆ ನ್ಯಾಯ ಒದಗಿಸಲು ಶ್ರಮಿಸಬೇಕು. ಪ್ರತಿಯೊಬ್ಬರ ಅಧಿಕಾರಿ ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ಮಾಡಬೇಕು’ ಎಂದು ತಿಳಿಸಿದರು.
‘ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕರಿಗೆ ನಂಬಿಕೆ ಬರಬೇಕು. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪೊಲೀಸರು ತಮ್ಮ ಠಾಣೆಗೆ ಬರುವವರೊಂದಿಗೆ ಸೌರ್ಜನ್ಯದಿಂದ ನಡೆದುಕೊಳ್ಳಬೇಕು. ನೊಂದವರಿಗೆ ಆತ್ಮಸೈರ್ಯ ತುಂಬಬೇಕು’ ಎಂದು ಪೊಲೀಸರಿಗೆ ಸೂಚನೆ ನೀಡಿದರು.
‘ಹಿರೇಕೆರೂರು ತಾಲ್ಲೂಕು ಆಸ್ಪತ್ರೆಯಲ್ಲಿ ಬಾಣಂತಿ ಹಾಗೂ ಗರ್ಭಿಣಿಯರಿಗೆ ಊಟ ನೀಡುತ್ತಿಲ್ಲ. ತುರ್ತು ನಿಗಾ ಘಟಕಕ್ಕೆ ಬೀಗ ಹಾಕಲಾಗಿದೆ. ಇದು ಸರಿಯಲ್ಲ. ಕೂಡಲೇ, ಬಾಣಂತಿ ಹಾಗೂ ಗರ್ಭಿಣಿಯರಿಗೆ ಊಟ, ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಬೇಕು. ಖಾಲಿ ವೈದ್ಯರ ಹುದ್ದೆ ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.
‘ಹಂಸಬಾವಿ ಗ್ರಾಮದಲ್ಲಿ ಅಲೆಮಾರಿ ಸಿಂಧೋಳ ಸಮುದಾಯದ ಜನರು ಮೂಲ ಸೌಕರ್ಯವಿಲ್ಲದೇ ಪರಿತಪಿಸುತ್ತಿದ್ದಾರೆ. ನೀರು, ರಸ್ತೆ, ವಿದ್ಯುತ್ ಯಾವುದೇ ಸೌಕರ್ಯವಿಲ್ಲ. ಜಾತಿ -ಆದಾಯ ಪ್ರಮಾಣ ಪತ್ರ, ಆಧಾರ್ ಹಾಗೂ ಇತರೆ ಯಾವುದೇ ದಾಖಲೆಗಳಿಲ್ಲ. ಈ ಸಮುದಾಯದ ಜನರಿಗೆ ತ್ವರಿತವಾಗಿ ಮೂಲ ಸೌಕರ್ಯ ಒದಗಿಸಬೇಕು’ ಎಂದು ತಾಕೀತು ಮಾಡಿದರು.
‘ಶಿಗ್ಗಾವಿ ತಾಲ್ಲೂಕಿನ ಗೋಟಗೋಡಿ ಬಿಸಿಎಂ ವಸತಿ ನಿಲಯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಸ್ ನಿಲುಗಡೆ ಸಮಸ್ಯೆ ಇದೆ. ಅದನ್ನು ತ್ವರಿತವಾಗಿ ಬಗೆಹರಿಸಬೇಕು. ಹಾವೇರಿ ನಗರದ ಬಾಲಕಿಯರ ಸರ್ಕಾರಿ ಪದವಿ ಕಾಲೇಜಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.
ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಜಿ.ಪಂ. ಸಿಇಒ ರುಚಿ ಬಿಂದಲ್, ಜಿಲ್ಲಾ ಎಸ್ಪಿ ಯಶೋಧಾ ವಂಟಗೋಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರೇವತಿ ಹೊಸಮಠ ಇದ್ದರು.
ಹೆಚ್ಚು ದೂರುಗಳ ಸಲ್ಲಿಕೆ: ನಾಗಲಕ್ಷ್ಮಿ ಅವರನ್ನು ಭೇಟಿಯಾದ ಹಲವು ಮಹಿಳೆಯರು ತಮ್ಮ ಸಮಸ್ಯೆಗಳನ್ನು ದೂರಿನ ರೂಪದಲ್ಲಿ ಸಲ್ಲಿಸಿದರು.
ವಸತಿ ಸಮಸ್ಯೆ, ಹೊರಗುತ್ತಿಗೆ ಸಿಬ್ಬಂದಿಗಳ ಸಂಬಳ ವ್ಯತ್ಯಾಸ, ಫೈನಾನ್ಸ್ ಕಿರುಕುಳ, ಕಾರ್ಮಿಕರಿಗೆ ಸೌಲಭ್ಯ ಕೊರತೆ, ಪಡಿತರ ಚೀಟಿ, ಮಾಶಾಸನ, ಬಸ್ ನಿಲುಗಡೆ, ಹೆಚ್ಚುವರಿ ಬಸ್ ಸೌಲಭ್ಯ, ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಪರಿಹಾರ, ಹಕ್ಕು ಪತ್ರ ಸೇರಿದಂತೆ ಹಲವು ಸಮಸ್ಯೆಗಳನ್ನು ಮಹಿಳೆಯರು ಹೇಳಿಕೊಂಡರು.
ಎಲ್ಲರ ಮನವಿ ಆಲಿಸಿದ ನಾಗಲಕ್ಷ್ಮಿ, ಕಾನೂನಿನ ಚೌಕಟ್ಟಿನಡಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಜರುಗಿಸಿರುವುದಾಗಿ ಹೇಳಿದರು.
ಜಿಲ್ಲಾಸ್ಪತ್ರೆಗೆ ಭೇಟಿ:
ಹಾವೇರಿಯ ಕಾಗಿನೆಲೆ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅವರು ಗುರುವಾರ ಭೇಟಿ ನೀಡಿದರು. ಆಸ್ಪತ್ರೆ ಆವರಣ ವಾರ್ಡ್ ಹಾಗೂ ಇತರೆಡೆ ಓಡಾಡಿದ ನಾಗಲಕ್ಷ್ಮಿ ಎದುರಿಗೆ ಸಿಕ್ಕ ಜನರನ್ನು ಮಾತನಾಡಿಸಿದರು. ವೈದ್ಯರ ಚಿಕಿತ್ಸೆ ಔಷಧಿ ಮೂಲ ಸೌಕರ್ಯಗಳ ಬಗ್ಗೆ ವಿಚಾರಿಸಿದರು.
ಭೇಟಿ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ವೈದ್ಯರಿಗೆ ಕೆಲ ಸೂಚನೆ ನೀಡಿದ ನಾಗಲಕ್ಷ್ಮಿ ‘ಆಸ್ಪತ್ರೆಗೆ ಬರುವ ಮಹಿಳೆಯರು ಹಾಗೂ ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಸೌಜನ್ಯದಿಂದ ನಡೆದುಕೊಳ್ಳಬೇಕು’ ಎಂದರು. ‘ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಶುದ್ಡಿ ಕುಡಿಯುವ ನೀರು ಪೂರೈಸಬೇಕು. ಶೌಚಾಲಯ ಸ್ವಚ್ಛತೆ ಕಾಪಾಡಬೇಕು. ದೌರ್ಜನ್ಯ ಪೋಕ್ಸೊ ಪ್ರಕರಣದದ ಸಂತ್ರಸ್ತರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯ ಒದಗಿಸಬೇಕು’ ಎಂದು ಹೇಳಿದರು. ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರ) ಜಯಾನಂದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ.ಆರ್. ಹಾವನೂರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.